Chikkaballapur : ಚಿಕ್ಕಬಳ್ಳಾಪುರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ನೇತೃತ್ವದಲ್ಲಿ ಎರಡನೇ ತ್ರೈಮಾಸಿಕ ಕೆಡಿಪಿ ಸಭೆ (2nd Trimester KDP Meeting) ನಡೆಯಿತು.
ಸಭೆಯಲ್ಲಿ ಮಾಧ್ಯಮದವರೊಂದಿಗೆ ಮಾತಾನಾಡಿದ ಸಚಿವರು “ಚಿಕ್ಕಬಳ್ಳಾಪುರ ತಾಲ್ಲೂಕಿನ ರಂಗಧಾಮ ಕೆರೆಯಲ್ಲಿ ಎತ್ತಿನಹೊಳೆ ನೀರು ಸಂಗ್ರಹಿಸಲು ಚಿಂತಿಸಲಾಗುತ್ತಿದ್ದು ಈ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಅಮಾನಿಗೋಪಾಲಕೃಷ್ಣ ಕೆರೆಗೆ ಈಗಾಗಲೇ ಎಚ್.ಎನ್.ವ್ಯಾಲಿ ನೀರು ಹರಿಯುತ್ತಿರುವುದರಿಂದ ಕೆರೆಯಲ್ಲಿ ಎತ್ತಿನಹೊಳೆ ನೀರು ಸಂಗ್ರಹ ಸಾಧ್ಯವೇ ಎಂದು ಪರಿಶೀಲಿಸಲಾಯಿತು. ಇಷ್ಟು ದಿನ ಕೊಳಚೆ ನೀರು ತುಂಬಿಸಿರುವ ಕಾರಣ ಎತ್ತಿನಹೊಳೆ ನೀರು ತುಂಬಿಸುವುದು ಉಚಿತವಲ್ಲ. ಆದ್ದರಿಂದ ಇದರ ಬದಲು ರಂಗಧಾಮ ಕೆರೆಗೆ ಎತ್ತಿನಹೊಳೆ ನೀರು ಹರಿಸಲು ಆಲೋಚಿಸಲಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ಒಳಚರಂಡಿ (ಯುಜಿಡಿ) ಕಾಮಗಾರಿಗೆ ನಗರಾಭಿವೃದ್ಧಿ ಇಲಾಖೆ ₹ 40 ಕೋಟಿ ನೀಡಿದೆ. ಚಿಂತಾಮಣಿಗೆ ₹ 40 ಕೋಟಿ ಮತ್ತು ಶಿಡ್ಲಘಟ್ಟಕ್ಕೂ ₹ 30 ಕೋಟಿ ದೊರೆತಿದೆ. ಚಿಕ್ಕಬಳ್ಳಾಪುರದಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ ನಗರದ ಸುತ್ತಲಿನ ಕೆರೆಗಳಿಗೆ ಕೊಳಚೆ ನೀರು ಹರಿಯುತ್ತಿದೆ. ಈ ಕೊಳಚೆ ನೀರನ್ನು ಸರಿಯಾಗಿ ಸಂಸ್ಕರಣೆ ಮಾಡಬೇಕಾಗಿದೆ” ಎಂದು ತಿಳಿಸಿದರು.
ಬರದ ಕಾರಣ ಎಲ್ಲ ರೈತರಿಗೆ ₹ 2 ಸಾವಿರ ನೀಡಲು ಸರ್ಕಾರ ಮುಂದಾಗಿದೆ. ಹಣ ಸಂದಾಯಕ್ಕೆ ಪ್ರ್ಯೂಟ್ ಗುರುತಿನ ಚೀಟಿ ಮಾಡುವ ಕಾರ್ಯವು ಜಿಲ್ಲೆಯಲ್ಲಿ ನಡೆದಿದೆ. ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಗೆ ಸಂಬಂದಿಸಿದ ತಾಂತ್ರಿಕ ಅಡಚಣೆಯನ್ನು ಸರಿಪಡಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಶಿಬಿರಗಳು ನಡೆಯುತ್ತಿವೆ. ಒಂದೆರಡು ದಿನಗಳಲ್ಲಿ ಸರಿಪಡಿಸುವ ಕಾರ್ಯ ಆಗಲಿದೆ ಎಂದು ಸಚಿವ ಸುಧಾಕರ್ ತಿಳಿಸಿದರು.
ಶಾಸಕರಾದ ಎಸ್.ಎನ್.ಸುಬ್ಬಾರೆಡ್ಡಿ, ಪ್ರದೀಪ್ ಈಶ್ವರ್, ಕೆ.ಎಚ್.ಪುಟ್ಟಸ್ವಾಮಿ ಗೌಡ, ಬಿ. ಎನ್.ರವಿಕುಮಾರ್, ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ಹಾಗೂ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.