Chintamani : ಗ್ರಾಮೀಣ ಭಾಗಗಳ ರೈತರ ಪಂಪ್ಸೆಟ್ಗಳಿಗೆ ಕನಿಷ್ಠ ದಿನಕ್ಕ ಏಳು ಗಂಟೆ ತ್ರೀ-ಫೇಸ್ ವಿದ್ಯುತ್ (3 Phase Power) ಸರಬರಾಜು (Supply) ಮಾಡುವಂತೆ ಒತ್ತಾಯಿಸಿ ಚಿಂತಾಮಣಿ ತಾಲ್ಲೂಕಿನ ತಳಗವಾರದಲ್ಲಿರುವ ವಿದ್ಯುತ್ ಉಪಕೇಂದ್ರದ ವ್ಯಾಪ್ತಿಯ ಗ್ರಾಮಗಳ ನೂರಾರು ರೈತರು (Farmer) ಗುರುವಾರ ಬೆಳಿಗ್ಗೆ ಉಪಕೇಂದ್ರದ ಮುಂದೆ ಜಮಾವಣೆಯಾಗಿ ಕಛೇರಿಗೆ ಬೀಗ ಜಡಿದು ಪ್ರತಿಭಟನೆ (Protest) ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು “ತಳಗವಾರ ವಿದ್ಯುತ್ ಉಪಕೇಂದ್ರದ ವ್ಯಾಪ್ತಿಗೆ ಬರುವ ಸುಮಾರು 50 ಗ್ರಾಮಗಳಿಗೆ ಸಮಯಕ್ಕೆ ಸರಿಯಾಗಿ ಸಮರ್ಪಕ ವಿದ್ಯುತ್ ಸರಬರಾಜು ಆಗುತ್ತಿಲ್ಲ. ಸಾಲ ಮಾಡಿ ಬೆಳೆದಿರುವ ಬೆಳೆಗಳು ಒಣಗುತ್ತಿವೆ. ಸರ್ಕಾರವೇ ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದೆ. ಕೊಳವೆ ಬಾವಿಗಳಲ್ಲಿ ನೀರಿದೆ. ಮೇಲೆತ್ತಲು ಕೃಷಿಪಂಪ್ಸೆಟ್ಗಳಿಗೆ ಸರಿಯಾಗಿ ವಿದ್ಯುತ್ ಸರಬರಾಜು ಆಗುತ್ತಿಲ್ಲ. ದಿನದಲ್ಲಿ ಹತ್ತಾರು ಬಾರಿ ಅನಧಿಕೃತವಾಗಿ ವಿದ್ಯುತ್ ಕಡಿತವಾಗುತ್ತದೆ. ಬೆಳೆದು ನಿಂತಿರುವ ಬೇಳೆಗಳಿಗೆ ನೀರು ಹಾಯಿಸಿ ಬೆಳೆಗಳನ್ನು ಉಳಿಸಿಕೊಳ್ಳಲು ರೈತರು ಹಗಲು-ರಾತ್ರಿ ಶ್ರಮಿಸುತ್ತಿದ್ದಾರೆ” ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಯಪಾಲಕ ಎಂಜನಿಯರ್ ಶುಭ, ಸಹಾಯಕ ಕಾರ್ಯಪಾಲಕ ಎಂಜನಿಯರ್ಗಳಾದ ಶಿವಶಂಕರ್, ಶ್ರೀನಿವಾಸಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಕುಳಿತು ಮಾತುಕತೆ ನಡೆಸಿದರು. ಬಳಿಕ ಬೆಸ್ಕಾಂ ಕಚೇರಿಗಳಿಗೆ ಹಾಕಲಾಗಿದ್ದ ಬೀಗವನ್ನು ತೆಗೆಯಲಾಯಿತು.
