Chikkaballapur : ಮಾಸಿಕ ₹10 ಸಾವಿರ ಗೌರವಧನ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ಆಶಾ ಕಾರ್ಯಕರ್ತೆಯರು ಮಂಗಳವಾರದಿಂದ ಆಗಸ್ಟ್ 14ರವರೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಧರಣಿ (ASHA workers protest) ಆರಂಭಿಸಿದ್ದಾರೆ.
ಪ್ರತಿಭಟನಾಕಾರರು, ಮುಖ್ಯಮಂತ್ರಿಗಳ ಘೋಷಣೆಯಂತೆ ರಾಜ್ಯದ ಗೌರವಧನ ಹಾಗೂ ಕೇಂದ್ರದ ಭಾಗಶಃ ಪ್ರೋತ್ಸಾಹಧನ ಸೇರಿಸಿ ಮಾಸಿಕ ₹10 ಸಾವಿರ ಜಾರಿಗೊಳಿಸಬೇಕು, ಇದು ಏಪ್ರಿಲ್ನಿಂದಲೇ ಅನ್ವಯವಾಗಬೇಕು ಎಂದು ಒತ್ತಾಯಿಸಿದರು. ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ₹1 ಸಾವಿರ ಹೆಚ್ಚಿಸಿದಂತೆ, ಆಶಾ ಕಾರ್ಯಕರ್ತೆಯರ ಪ್ರೋತ್ಸಾಹಧನವೂ ಹೆಚ್ಚಿಸಬೇಕು. ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆದುಹಾಕಬಾರದು, ಅನ್ಯಾಯವಾದ ಮೌಲ್ಯಮಾಪನವನ್ನು ನಿಲ್ಲಿಸಬೇಕು, ನಿವೃತ್ತರಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡುಗಂಟು ನೀಡಬೇಕು, ನಗರ ಪ್ರದೇಶದ ಆಶಾ ಕಾರ್ಯಕರ್ತೆಯರಿಗೆ ಹೆಚ್ಚುವರಿ ₹2 ಸಾವಿರ ಗೌರವಧನ ನೀಡಬೇಕು ಎಂದು ಬೇಡಿಕೆಯಿಟ್ಟರು.
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬೇಡಿಕೆಗಳನ್ನು ತಕ್ಷಣ ಈಡೇರಿಸಬೇಕು ಎಂದು ಘೋಷಣೆ ಕೂಗಿದ ಪ್ರತಿಭಟನೆಯಲ್ಲಿ ಸಂಘಟನೆಯ ಮುಖಂಡರಾದ ಸರಸ್ವತಮ್ಮ, ರೇಷ್ಮಾ, ಸುಶೀಲಾ, ಮಂಜುಳಾ, ಜಯಮ್ಮ, ರಾಜಶೇಖರ್, ಜಯಣ್ಣ ಹಾಗೂ ಹಲವರು ಭಾಗವಹಿಸಿದರು.
