Bagepalli : ಬಾಗೇಪಲ್ಲಿ ತಾಲ್ಲೂಕಿನಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ (Minority Wing) ಹೊಸ ಪದಾಧಿಕಾರಿಗಳಿಗೆ ಬುಧವಾರ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ (SN Subbareddy) ನೇಮಕಾತಿ ಆದೇಶ ಪತ್ರ ವಿತರಿಸಿದರು. ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸ್ಥಾನಕ್ಕೆ ಪಟ್ಟಣದ ನಿಜಾಮುದ್ದೀನ್ (ಬಾಬು) ಅವರನ್ನು ಎರಡನೇ ಬಾರಿ ಆಯ್ಕೆ ಮಾಡಲಾಗಿದೆ. ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಅಲ್ಪಸಂಖ್ಯಾತರನ್ನು ಸೇರ್ಪಡೆಗೊಳಿಸಿ ನೂತನ ಸಮಿತಿಯನ್ನು ರಚಿಸಲಾಗಿದೆ.
ಈ ಸಂದರ್ಭದಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಮಾತನಾಡಿ “ನೂತನ ಪದಾಧಿಕಾರಿಗಳು ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ, ಅಲ್ಪಸಂಖ್ಯಾತ ಸಮುದಾಯದ ಜನರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ಅಂತಿಮ ಪ್ರಜೆಗೆ ತಲುಪಿಸುವ ಹೊಣೆಗಾರಿಕೆಯನ್ನು ನಿಭಾಯಿಸಬೇಕು ಮತ್ತು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸರ್ಕಾರ ವಸತಿ ನಿಲಯಗಳ ಸೌಲಭ್ಯ ಒದಗಿಸಿದ್ದು ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಮತ್ತು ಶಿಕ್ಷಣದಲ್ಲಿ ಮುಂದಾಗುವಂತೆ ಜಾಗೃತಿ ಮೂಡಿಸಬೇಕು” ಎಂದು ಸಲಹೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷ ಎ. ಶ್ರೀನಿವಾಸ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ವಿ. ಪ್ರಭಾಕರರೆಡ್ಡಿ, ಕೆಪಿಸಿಸಿ ಸದಸ್ಯ ಮಂಜುನಾಥರೆಡ್ಡಿ, ಕಾಂಗ್ರೆಸ್ ಮುಖಂಡರುಗಳು ಬಿ.ಎಚ್. ಆರೀಫ್, ಮಹಮ್ಮದ್ ಎಸ್. ನೂರುಲ್ಲಾ, ಮಹಮ್ಮದ್ ಅಕ್ರಂ, ಮನ್ಸೂರ್, ದರಖಾಸ್ತು ಸಮಿತಿ ಸದಸ್ಯ ಲಕ್ಷ್ಮಿನರಸಿಂಹಪ್ಪ, ಜಾಮೀಯಾ ಮಸೀದಿ ಅಧ್ಯಕ್ಷ ಸಲೀಂ ಅಹಮದ್, ಮಾಜಿ ಅಧ್ಯಕ್ಷ ಜಮೀರ್ ಅಹಮದ್ ಮತ್ತಿತರರು ಉಪಸ್ಥಿತರಿದ್ದರು.