Chintamani : ಚಿಂತಾಮಣಿ ನಗರದ DySP ಕಚೇರಿಯಲ್ಲಿ ಸೋಮವಾರ ಪೌರಾಯುಕ್ತರು ಮತ್ತು ಎಎಸ್ಪಿ ಕುಶಾಲ್ ಚೌಕ್ಸೆ ರವರ ನೇತೃತ್ವದಲ್ಲಿ ಬೀದಿಬದಿ ವ್ಯಾಪಾರಿಗಳ (Street Vendors Meeting) ಸಭೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪೌರಾಯುಕ್ತ ಜಿ.ಎನ್.ಚಲಪತಿ “ಹಬ್ಬದ ವ್ಯಾಪಾರಕ್ಕಾಗಿಯೇ ನಗರದ ಹೃದಯ ಭಾಗ ಅಂಬೇಡ್ಕರ್ ಭವನದ ಹಿಂಭಾಗದಲ್ಲಿರುವ ಖಾಲಿ ಜಾಗದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಅವಕಾಶ ಮಾಡಿ ಕೊಡಲಾಗುವುದು. ಹಬ್ಬದ ವ್ಯಾಪಾರಕ್ಕಾಗಿ ನಗರದಲ್ಲಿ ರಸ್ತೆಗಳ ಪಾದಾಚಾರಿ ಮಾರ್ಗಗಳನ್ನು ಒತ್ತುವರಿ ಮಾಡಿಕೊಂಡರೆ, ಜನರು ಮತ್ತು ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತದೆ ಆದ್ದರಿಂದ ರಸ್ತೆಗಳಲ್ಲಿ ಯಾರೂ ವ್ಯಾಪಾರ ಮಾಡಬಾರದು. ಬೀದಿಬದಿ ವ್ಯಾಪಾರಸ್ಥರಿಗೆ ತೊಂದರೆ ಕೊಡುವುದು ಅಥವಾ ಅವರ ಹೊಟ್ಟೆ ಮೇಲೆ ಹೊಡೆಯುವುದು ನಮ್ಮ ಉದ್ದೇಶವಲ್ಲ. ಹಬ್ಬದ ದಿನಗಳಲ್ಲಿ ಜನರ ಸಂಚಾರವು ಮತ್ತು ವಾಹನಗಳ ದಟ್ಟಣೆ ಹೆಚ್ಚಿರುತ್ತದೆ. ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಈ ಕ್ರಮ ಕೈಗೊಳ್ಳಲಾಗಿದೆ” ಎಂದು ತಿಳಿಸಿದರು.
ಸಭೆಯಲ್ಲಿ ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಸೂಫಿ ಸಲೀಂ ಮತ್ತು ಪದಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು.