Chikkaballapur : ಚಿಕ್ಕಬಳ್ಳಾಪುರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಪರಿಶಿಷ್ಟ ಜಾತಿಯ ಒಳ ಮಿಸಲಾತಿ ವರ್ಗೀಕರಣ ಸಂಬಂಧ ಜಾತಿ ಸಮೀಕ್ಷೆ ಕುರಿತಾಗಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ನೇತೃತ್ವದಲ್ಲಿ ಜಿಲ್ಲಾ ದಲಿತ ಸಮುದಾಯದ ಮುಖಂಡರ ಸಭೆ (Dalit leaders meeting) ನಡೆಯಿತು.
ಸಭೆಯಲ್ಲಿ ದಲಿತ ಮುಖಂಡರು ತಮ್ಮ ಸಲಹೆಗಳನ್ನು ನೀಡಿದ್ದು, ಅವುಗಳನ್ನು ಗಮನಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಜಿಲ್ಲಾಧಿಕಾರಿಗಳು, ಸಮೀಕ್ಷೆಗೆ ಬಂದಾಗ ಪರಿಶಿಷ್ಟ ಜಾತಿಯ ನಾಗರಿಕರು ಸರಿಯಾದ ಮಾಹಿತಿ ನೀಡಬೇಕು ಹಾಗೂ ಗಣತಿದಾರರಿಗೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ಸಭೆಯಲ್ಲಿ ಸರ್ಕಾರದ ಮಾರ್ಗಸೂಚಿಗಳ ಕುರಿತು ಮಾಹಿತಿ ನೀಡಲಾಯಿತು. ಜಾತಿ, ಉಪಜಾತಿ ವಿವರಗಳನ್ನು ಸ್ಪಷ್ಟವಾಗಿ ದಾಖಲಿಸಲು, ಆದಿ ಕರ್ನಾಟಕ ಹಾಗೂ ಆದಿ ದ್ರಾವಿಡ ಎಂಬ ಹೆಸರನ್ನು ಸರಿಯಾಗಿ ನಮೂದಿಸಲು ತಿಳಿಸಲಾಯಿತು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ನಿಟ್ಟಾಲಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ದಲಿತ ಸಂಘಟನೆಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.









