Chikkaballapur : ಚಿಕ್ಕಬಳ್ಳಾಪುರ ವಿಧಾನಸಭೆ ವ್ಯಾಪ್ತಿಯ ಕೆಲ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (Dr K Sudhakar) ಚಾಲನೆ ನೀಡಿದರು. ಚಿಕ್ಕಬಳ್ಳಾಪುರ ತಾಲ್ಲೂಕಿನ ಮಂಡಿಕಲ್ಲು, ಕಮ್ಮಗುಟ್ಟಹಳ್ಳಿ, ಅಡ್ಡಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತ್ಯಾಜ್ಯ ವಿಲೇವಾರಿಗೆ ದರಬೂರು ಗ್ರಾಮದ ಬಳಿ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಭೂಮಿಪೂಜೆ ಮಾಡಿ ರೆಡ್ಡಿಗೊಲ್ಲವಾರಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಬ್ಯಾಸ್ಕೆಟ್ ಬಾಲ್ (Basket Ball) ಅಂಕಣ, ಕಿರಿಯ ಪ್ರಾಥಮಿಕ ಶಾಲೆಯ ಕೊಠಡಿ ಗಳನ್ನು ಉದ್ಘಾಟಿಸಿದ ನಂತರ ಸೊಪ್ಪಹಳ್ಳಿ ಮತ್ತು ಮರಸನಹಳ್ಳಿಯಲ್ಲಿ ನಿರ್ಮಿಸಿರುವ ‘ಅಂಬೇಡ್ಕರ್ ಭವನ’ (Ambedkar Bhavan) ಹಾಗೂ ‘ಗರಡಿಮನೆ’ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಸಚಿವರು ” ಪ್ರಧಾನಿ ನರೇಂದ್ರ ಮೋದಿ (Narendra Modi) ಯವರು ಗಾಂಧೀಜಿ (Mahatma Gandhi) ಅವರ ಗ್ರಾಮ ಸ್ವರಾಜ್ಯ (Gram Swaraj) ದ ಕನಸನ್ನು ನನಸು ಮಾಡುತ್ತಿದ್ದಾರೆ. ಸ್ವಚ್ಛ ಭಾರತ್ ಮಿಷನ್ ಮೂಲಕ ದೇಶದಲ್ಲಿ 10 ಕೋಟಿಗೂ ಹೆಚ್ಚು ಶೌಚಾಲಯಗಳನ್ನು ನಿರ್ಮಿಸಿ ಸ್ವಚ್ಛತೆಯನ್ನು ದೇಶದಲ್ಲಿ ಅನುಷ್ಠಾನಗೊಳಿಸಲು ಕ್ರಮಗಳನ್ನು ಕೈಗೊಂಡಿದ್ದಾರೆ.
ಮಹಿಳೆಯರ ಸ್ವಾಭಿಮಾನ ರಕ್ಷಣೆಗೆ ಕ್ರಮ ಕೈಗೊಳ್ಳಲು ಘನತ್ಯಾಜ್ಯ ಘಟಕಗಳ ಸ್ಥಾಪನೆಗೂ ಕ್ರಮ ಕೈಗೊಳ್ಳಲಾಗುತ್ತಿದೆ. ಮನೆ ಮನೆಗೆ ನಲ್ಲಿ ನೀರನ್ನು ಜಲಜೀವನ್ ಮಿಷನ್ ನಡಿಯಲ್ಲಿ ಪೂರೈಸಲಾಗುತ್ತಿದ್ದು ಎಲ್ಲರ ಅಭಿವೃದ್ಧಿಯಿಂದ ಸಮಾನತೆ ಸಾಧ್ಯವೇ ಹೊರತು ಭಾಷಣದಿಂದಲ್ಲ” ಎಂದು ಹೇಳಿದರು.
ರಾಜ್ಯ ಮಾವು ಮತ್ತು ಮಾರುಕಟ್ಟೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ವಿ. ನಾಗರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ತಾ.ಪಂ ಕಾರ್ಯ ನಿರ್ವಾಹಣಾಧಿಕಾರಿ ಮಂಜುನಾಥ್, ಮಂಡಿಕಲ್ಲು ಹಾಗೂ ಅಡ್ಡಗಲ್ಲು ಗ್ರಾಪಂಗಳ ಪಿಡಿಒಗಳು, ಆಶಾ ಕಾರ್ಯಕರ್ತರು, ಗ್ರಾಪಂ ಅಧ್ಯಕ್ಷರು, ಸದಸ್ಯರು ಕಾರ್ಯಕ್ರಮಗಳಲ್ಲಿ ಉಪಸ್ಥಿತರಿದ್ದರು.