Gauribidanur : ಗೌರಿಬಿದನೂರು ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಬುಧವಾರ ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ (KH Puttaswamy Gowda) ನೇತೃತ್ವದಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳೊಂದಿಗೆ ತಾಲ್ಲೂಕು ಮಟ್ಟದ ತ್ರೈಮಾಸಿಕ ಸಭೆ ಮತ್ತು ಪ್ರಗತಿ ಪರಿಶೀಲನೆ (KDP Meeting) ನಡೆಸಿದರು.
ಆರೋಗ್ಯ ಇಲಾಖೆಯಲ್ಲಿ ಆಂಬುಲೆನ್ಸ್ ಸೇವೆ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಮತ್ತು ವೈದ್ಯರು ಸಮಯಕ್ಕೆ ಆಸ್ಪತ್ರೆಗೆ ಹಾಜರಾಗುತ್ತಿಲ್ಲ ಎಂಬ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿವೆ. ಈ ಬಗ್ಗೆ ಹೆಚ್ಚಿನ ಗಮನಹರಿಸಿ, ರೋಗಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ಎಚ್ಚರಿಸಿ ಈ ಬಾರಿ ಮಳೆಗಾಲದಲ್ಲಿ ಸರ್ಕಾರಿ ಜಾಗ, ಶಾಲಾ ಆವರಣ ಹಾಗೂ ರಸ್ತೆ ಬದಿಯಲ್ಲಿ ಹೆಚ್ಚಿನ ಗಿಡಗಳನ್ನು ನೆಟ್ಟು ಹಸಿರೀಕರಣಕ್ಕೆ ಒತ್ತು ನೀಡಬೇಕು ಕೆಲವು ಶಾಲೆಗಳ ಶೌಚಾಲಯ ಕಾಮಗಾರಿಗಳು ನಿಧಾನವಾಗಿ ಸಾಗುತ್ತಿದ್ದು, ಅವುಗಳನ್ನು ಶೀಘ್ರ ಮುಗಿಸಲು ಸೂಚಿಸಿದರು. ಬೇಸಿಗೆ ಪ್ರಾರಂಭವಾಗಿರುವುದರಿಂದ 13 ಹಳ್ಳಿಗಳಲ್ಲಿ ನೀರಿನ ಕೊರತೆ ಸಂಭವಿಸಬಹುದು, ಇದಕ್ಕಾಗಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು BESCOM ಇಲಾಖೆ ರೈತರಿಗೆ ಉತ್ತಮ ವಿದ್ಯುತ್ ಪೂರೈಕೆ ನೀಡಲು, 4 ರಿಂದ 5 ಕೊಳವೆ ಬಾವಿಗೆ ಒಂದು ವಿದ್ಯುತ್ ಪರಿವರ್ತಕ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ಸಭೆಯಲ್ಲಿ ಸೂಚಿಸಿದರು.
ನರೇಗಾ ಯೋಜನೆಯಡಿ 2023-24ರಲ್ಲಿ ₹41 ಕೋಟಿ ಮೌಲ್ಯದ ಚರಂಡಿ, ಶಾಲಾ ಮೂಲಸೌಕರ್ಯ, ಕೆರೆಗಳ ಹೂಳು ತೆಗೆಯುವುದು, ಚೆಕ್ ಡ್ಯಾಮ್ ನಿರ್ಮಾಣ, ರೈತರ ಹೊಲಗಳಿಗೆ ರಸ್ತೆ ನಿರ್ಮಾಣ ಮುಂತಾದ ಹಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು ಮುಂದಿನ ಆರ್ಥಿಕ ವರ್ಷದಲ್ಲಿ ₹17.50 ಕೋಟಿ ವೆಚ್ಚದಲ್ಲಿ 348 ಚರಂಡಿ ಕಾಮಗಾರಿಗಳನ್ನು ನಡೆಸಲಾಗುತ್ತದೆ ಎಂದು ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಜಿ.ಕೆ. ಹೊನ್ನಯ್ಯ ಮಾಹಿತಿ ನೀಡಿದರು. ಈ ಸಭೆಯಲ್ಲಿ ತಹಶೀಲ್ದಾರ್ ಮಹೇಶ್ ಎಸ್. ಪತ್ರಿ, ನಗರಸಭೆ ಅಧ್ಯಕ್ಷೆ ಡಿ.ಎಂ. ಗೀತಾ, ವೃತ್ತ ನಿರೀಕ್ಷಕ ಕೆ.ಪಿ. ಸತ್ಯನಾರಾಯಣ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.