Gauribidanur, Chikkaballapur : ಖಾಸಗಿ ಶಾಲಾ ವಾಹನ ಚಾಲಕರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ವಿದ್ಯಾರ್ಥಿಗಳ ಸುರಕ್ಷತೆಯೇ ಮೊದಲ ಆದ್ಯತೆ ಎಂದು ವೃತ್ತ ನಿರೀಕ್ಷಕ ಅಂಜನ್ ಕುಮಾರ್ ತಿಳಿಸಿದ್ದಾರೆ.
ನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ಶಾಲಾ ಮುಖ್ಯಸ್ಥರು ಹಾಗೂ ಶಾಲಾ ವಾಹನ ಚಾಲಕರಿಗಾಗಿ ಸಭೆ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಸಂಚರಿಸುವ ಎಲ್ಲಾ ಶಾಲಾ ವಾಹನಗಳು ಮಾನ್ಯ ಪರವಾನಗಿ ಹಾಗೂ ದಾಖಲೆಗಳನ್ನು ಹೊಂದಿರಬೇಕು ಎಂದು ಹೇಳಿದರು.
“ಮದ್ಯಪಾನ ಮಾಡಿದ ಸ್ಥಿತಿಯಲ್ಲಿ ವಾಹನ ಚಲಾಯಿಸುವುದು, ಕಿರಿದಾದ ರಸ್ತೆಯಲ್ಲಿ ವೇಗವಾಗಿ ಓಡಿಸುವುದು, ಸಂಚಾರ ನಿಯಮಗಳನ್ನು ಉಲ್ಲಂಘಿಸುವಂತಹ ವರ್ತನೆ ಕಂಡುಬಂದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು,” ಎಂದು ಎಚ್ಚರಿಕೆ ನೀಡಿದರು.
ಶಾಲಾ ಆಡಳಿತ ಮಂಡಳಿಗಳು ತಮ್ಮ ಚಾಲಕರಿಗೆ ಸಂಚಾರ ನಿಯಮಗಳ ಬಗ್ಗೆ ಸ್ಪಷ್ಟ ನಿರ್ದೇಶನ ನೀಡಬೇಕು ಹಾಗೂ ನಿಯಮ ಪಾಲನೆ ಖಚಿತಪಡಿಸಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಪಿಎಸ್ಐ ಗೋಪಾಲ್, ಮಂಜುನಾಥ್, ನವೀನ್, ವಿವಿಧ ಶಾಲೆಗಳ ಶಿಕ್ಷಕರು ಹಾಗೂ ವಾಹನ ಚಾಲಕರು ಹಾಜರಿದ್ದರು.
