Chikkaballapur : ಚಿಕ್ಕಬಳ್ಳಾಪುರದಲ್ಲಿ ಸೋಮವಾರ ಸರ್ಕಾರಿ ನೌಕರರ ದಿನಾಚರಣೆ (Government employees day) ಹಾಗೂ 2023ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು. ಜಿಲ್ಲಾಡಳಿತ ಮತ್ತು ಜಿಲ್ಲಾ ಸರ್ಕಾರಿ ನೌಕರರ ಸಂಘದ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಡಳಿತ ಭವನದಲ್ಲಿ ಈ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ಮಾತನಾಡುತ್ತಾ, “ಪ್ರಾಮಾಣಿಕತೆ ಮತ್ತು ಕಠಿಣ ಪರಿಶ್ರಮದಿಂದ ಕೆಲಸ ಮಾಡುವ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳ ವಿರುದ್ಧ ರಾಜಕೀಯ ಪ್ರೇರಿತವಾಗಿ ಅಥವಾ ವೈಯಕ್ತಿಕ ದ್ವೇಷದ ಆಧಾರದಲ್ಲಿ ಪ್ರಕರಣಗಳು ದಾಖಲಾಗಿ ಬೆದರಿಕೆ ಹಾಕುವುದು ಸರಿಯಲ್ಲ. ನೌಕರರು ಸಾರ್ವಜನಿಕರ ಕೆಲಸಗಳನ್ನು ವಿಳಂಬ ಮಾಡದೆ, ಕಾನೂನು ಬದ್ಧವಾಗಿ ಹಾಗೂ ನೈತಿಕತೆಯಿಂದ ನಿಭಾಯಿಸಬೇಕು. ಜನರು ಸರ್ಕಾರಿ ಕಚೇರಿಗಳ ಮೇಲೆ ಹೆಚ್ಚು ನಂಬಿಕೆ ಇಡುವಂತೆ ನಡವಳಿಕೆ ಇರಬೇಕು,ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ತರಲಾಗಿದ್ದು ಈ ಪೈಕಿ ವೇತನಕ್ಕಾಗಿ ಮಾತ್ರ ₹19 ಸಾವಿರ ಕೋಟಿ ಬಜೆಟ್ನಲ್ಲಿ ನಿಗದಿಪಡಿಸಲಾಗಿದೆ. ನೌಕರರು ಈ ಅವಕಾಶವನ್ನು ಸದ್ಭಳಕೆ ಮಾಡಿಕೊಳ್ಳಬೇಕು. ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ, ನಿರೀಕ್ಷೆಯಿಲ್ಲದೆ ನಿರ್ವಹಿಸಿ ಸರ್ಕಾರಕ್ಕೂ ಜನರಿಗೂ ಉತ್ತಮ ಸೇವೆ ನೀಡಬೇಕು” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ಎನ್. ರಮೇಶ್, ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಜಿಪಂ ಉಪ ಕಾರ್ಯದರ್ಶಿ ಅತಿಕ್ ಪಾಷ, ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ. ವೆಂಕಟೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.