Chikkaballapur : ರಾಜ್ಯ ಮಾನವ ಹಕ್ಕುಗಳ ಆಯೋಗ, ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಪೊಲೀಸ್, ವಾರ್ತಾ ಇಲಾಖೆ, ಉನ್ನತಿ ಮಾನವ ಹಕ್ಕುಗಳ ರಕ್ಷಣಾ ಸಂಘ, ಕೆಂಪೇಗೌಡ ಕಾನೂನು ಕಾಲೇಜು ಹಾಗೂ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ಬುಧವಾರ ಚಿಕ್ಕಬಳ್ಳಾಪುರ ನಗರದಲ್ಲಿ ‘ವಿಶ್ವ ಮಾನವ ಹಕ್ಕುಗಳ ದಿನಾಚರಣೆ’ (Human Rights Day) ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ನೇರಳೆ ವೀರಭದ್ರಯ್ಯ ಭವಾನಿ ” ಯಾವುದೇ ಒಬ್ಬ ವ್ಯಕ್ತಿಗೆ ಜೀವನ ಮಾಡಲು ಮೂಲಸೌಕರ್ಯಗಳ ಕೊರತೆ ಉಂಟಾದರೆ, ಸಮಾನತೆ ಹಾಗೂ ಸ್ವಾತಂತ್ರ್ಯಕ್ಕೆ ಧಕ್ಕೆಯಾದರೆ ಅದು ಸಹ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತದೆ. ಒಬ್ಬ ಮನುಷ್ಯ ಮತ್ತೊಬ್ಬರನ್ನು ಯಾವ ರೀತಿ ಗೌರವಿಸಬೇಕು. ತಮಗಿರುವ ಮಾನವ ಹಕ್ಕುಗಳು ಇತರರಿಂದ ಉಲ್ಲಂಘನೆ ಆಗದಂತೆ ಹೇಗೆ ಸಂರಕ್ಷಿಸಿಕೊಳ್ಳಬೇಕು. ಒಂದು ವೇಳೆ ಉಲ್ಲಂಘನೆಯಾದರೆ ಯಾವ ರೀತಿಯಲ್ಲಿ ನ್ಯಾಯ ಪಡೆದುಕೊಳ್ಳ ಬೇಕು ಎಂಬುದನ್ನು ಮಾನವ ಹಕ್ಕುಗಳ ಆಯೋಗ ಹಲವು ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುತ್ತಿದೆ” ಎಂದು ಹೇಳಿದರು.
ಯಾವುದೇ ಸಕ್ಷಮ ಕಚೇರಿ ಅಥವಾ ಸಂಸ್ಥೆಯಿಂದ ಮಾನವ ಹಕ್ಕುಗಳ ರಕ್ಷಣಾ ಕಾರ್ಯ ವಿಫಲವಾದ ಸಂದರ್ಭಗಳಲ್ಲಿ ಮಾನವ ಹಕ್ಕುಗಳ ಆಯೋಗ ಸಂಪರ್ಕಿಸಬಹುದು. ‘ಮಾನವ ಹಕ್ಕುಗಳ ರಕ್ಷಣೆ’ ಎಂಬ ಮೊಬೈಲ್ ಆ್ಯಪ್ ಅನ್ನು ಗೂಗಲ್ ಪ್ಲೇಸ್ಟೋರ್ನಿಂದ ಡೌನ್ಲೋಡ್ ಮಾಡಿಕೊಂಡು ಆನ್ ಲೈನ್ ಮೂಲಕ ದೂರು ನೀಡಬಹುದು. https://kshrc.karnataka.gov.in ಮತ್ತು www.hrcnet.nic.in ನಲ್ಲೂ ವಿವರಗಳನ್ನು ನಮೂದಿಸಿ ದೂರು ಸಲ್ಲಿಸಬಹುದು. 1800-4252-3333 ಸಹಾಯವಾಣಿಗೆ ಕರೆ ಮಾಡಿ ದೂರು ಸಲ್ಲಿಸಬಹುದು ಎಂದು ಗುಡಿಬಂಡೆಯ ಉನ್ನತಿ ಮಾನವ ಹಕ್ಕುಗಳ ರಕ್ಷಣಾ ಸಂಘದ ಅಧ್ಯಕ್ಷ ಜಿ.ವಿ.ವಿಶ್ವನಾಥ್ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಅರುಣಾ ಕುಮಾರಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಎನ್. ಭಾಸ್ಕರ್, ಉಪ ವಿಭಾಗಾಧಿಕಾರಿ ಡಿ.ಎಚ್. ಅಶ್ವಿನ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್.ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಎಸ್.ಎಂ.ಮುರಳಿ ಮೋಹನ್, ರಾಷ್ಟ್ರೀಯ ಮಾನವ ಹಕ್ಕುಗಳು ಜಿಲ್ಲಾ ಅಧ್ಯಕ್ಷ ಟಿ.ಆರ್.ಕೃಷ್ಣಪ್ಪ, ಸರ್ಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲ ಚಂದ್ರಯ್ಯ, ಕೆಂಪೇಗೌಡ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಶೋಭಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಜುಂಜಣ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
