Chikkaballapur : ಚಿಕ್ಕಬಳ್ಳಾಪುರ ನಂದಿ ವೈದ್ಯಕೀಯ ಶಿಕ್ಷಣ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆ ಸಹಯೋಗದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಗುರುವಾರ ‘ಅಂತರರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನ’ (International Anti-Drug Abuse and Trafficking Day) ಹಮ್ಮಿಕೊಳಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್ ನ್ಯಾಯಾಧೀಶರಾದ ನೇರಳೆ ವೀರಭದ್ರಯ್ಯ ಭವಾನಿ “ಮಾದಕ ವಸ್ತುಗಳ ಸೇವನೆ ಮಾನವನ ಸಹಜ ಜೀವನಕ್ಕೆ ವಿರುದ್ಧವಾಗಿದೆ. ದುಷ್ಪರಿಣಾಮಗಳ ಬಗ್ಗೆ ಎಷ್ಟೇ ಜಾಗೃತಿ ಮೂಡಿಸುತ್ತಿದ್ದರೂ ವಿದ್ಯಾರ್ಥಿ ಯುವಜನರೇ ಅತಿ ಹೆಚ್ಚು ಬಲಿ ಆಗುತ್ತಿದ್ದಾರೆ. ಯುವ ಸಮೂಹಕ್ಕೆ ಮಾದಕ ವಸ್ತುಗಳ ವ್ಯಸನದಿಂದ ಆಗುವ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಸಮಸ್ಯೆಗಳ ಅರಿವಿನ ಕೊರತೆಯಿದೆ. ಈ ಬಗ್ಗೆ ಅರಿವು ಮೂಡಿಸಿ ಸಮಾಜವನ್ನು ಮಾದಕ ವಸ್ತುಗಳ ಸೇವನೆಯಿಂದ ಮತ್ತು ಅಕ್ರಮ ಕಳ್ಳ ಸಾಗಣೆಯಿಂದ ಮುಕ್ತಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿ” ಎಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ಕೆ.ಉಮೇಶ್, ವೈದ್ಯಕೀಯ ಶಿಕ್ಷಣ ಕಾಲೇಜಿನ ನಿರ್ದೇಶಕ ಡಾ. ಎಂ.ಎಲ್. ಮಂಜುನಾಥ್, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜಾ ಇಮಾಮ್ ಖಾಸೀಂ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್.ಶ್ರೀನಿವಾಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ಮಹೇಶ್ ಕುಮಾರ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಶಿವಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಂಜುಳಾ, ಡಾ.ಸುರೇಶ್ ನಾಯಕ್, ಡಾ.ಶಂಕರಪ್ಪ, ಡಾ.ಅರ್ಜುನ್ ಬಹದ್ದೂರ್, ಡಾ.ಅನಿತ, ಡಾ.ಸಂದೀಪ್, ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಶಾಂತಿ ಪಾಲ್ಗೊಂಡಿದ್ದರು.