Chikkaballapur : ಸರ್ಕಾರದ ರೈತ ವಿರೋಧಿ ನೀತಿ (Anti Farmer Policy) ಖಂಡಿಸಿ BJP ಯು October11 ರಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಮಟ್ಟದಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಸೋಮವಾರ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ (Press Meet) ಮಾಜಿ ಸಚಿವ ಡಾ.ಕೆ.ಸುಧಾಕರ್ (K Sudhakar) ತಿಳಿಸಿದರು.
ಕೋವಿಡ್ ಸಮಯದಲ್ಲಿ ರಾಜ್ಯ ಸರ್ಕಾರಕ್ಕೆ ಎಲ್ಲ ಮೂಲಗಳಿಂದ ಆದಾಯ ನಿಲುಗಡೆಯಾದ ಸಮಯದಲ್ಲಿಯೂ ಬಿಜೆಪಿ ಸರ್ಕಾರ ವಿದ್ಯುತ್ ಕಡಿತ ಮಾಡದೇ ನಿರಂತರವಾಗಿ 7 ತಾಸು ವಿದ್ಯುತ್ ನೀಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಎರಡು ಗಂಟೆ ಮಾತ್ರ ವಿದ್ಯುತ್ ನೀಡುತ್ತಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಡಿ ರೈತರಿಗೆ ಕೇಂದ್ರ ಸರ್ಕಾರ ₹ 6 ಸಾವಿರ, ರಾಜ್ಯ ಸರ್ಕಾರ ₹ 4 ಸಾವಿರ ನೀಡುತ್ತಿತ್ತು. ಈಗ ₹ 4 ಸಾವಿರ ನೀಡುತ್ತಿಲ್ಲ. ವಿದ್ಯಾಸಿರಿ ವಿದ್ಯಾರ್ಥಿ ವೇತನ, ಭೂಸಿರಿ ಯೋಜನೆಯಡಿ ನೆರವನ್ನು ಸರ್ಕಾರ ನಿಲ್ಲಿಸಿದೆ ಎಂದು ಸುಧಾಕರ್ ತಿಳಿಸಿದರು.
ಕಾಂಗ್ರೆಸ್ ಸೇಡಿನ ರಾಜಕಾರಣ ಮಾಡಿ ಚಿಕ್ಕಬಳ್ಳಾಪುರ ಹಾಲು ಒಕ್ಕೂಟವನ್ನು ರದ್ದುಗೊಳಿಸುವ ಮೂಲಕ ಜಿಲ್ಲೆಯ ರೈತರ ಸ್ವಾಭಿಮಾನಕ್ಕೆ ಸರ್ಕಾರ ಕೊಡಲಿ ಪೆಟ್ಟು ನೀಡಿದೆ. ರಾಜ್ಯದಲ್ಲಿಯೇ ಅತೀ ಹೆಚ್ಚು ಹೂವು ಬೆಳೆಯುವ ಜಿಲ್ಲೆ ಚಿಕ್ಕಬಳ್ಳಾಪುರ. ಇಂತಹ ಜಿಲ್ಲೆಯಲ್ಲಿ ಅಂತರರಾಷ್ಟ್ರೀಯ ಮಟ್ಟದ ಆತ್ಯಾಧುನಿಕ ಹೂವಿನ ಮಾರುಕಟ್ಟೆ ನಿರ್ಮಾಣ ಆಗಬೇಕು ಎಂದು ಬಿಜೆಪಿ ಸರ್ಕಾರ ಭೂಮಿ ಮಂಜೂರು ಮಾಡಿತು. ಬಜೆಟ್ನಲ್ಲಿ ಹಣ ಮೀಸಲಿಟ್ಟಿತ್ತು. ಆದರೆ ಈಗ ಮಾರುಕಟ್ಟೆಯೇ ರದ್ದಾಗಿದೆ. ಉಸ್ತುವಾರಿ ಸಚಿವರು ಬೇರೆ ಕಡೆ 20 ಎಕರೆಯಲ್ಲಿ ಹೂ ಮಾರುಕಟ್ಟೆ ನಿರ್ಮಿಸುವುದಾಗಿ ಹೇಳಿದ್ದಾರೆ. ಆದರೆ ಯಾವಾಗ ನಿರ್ಮಿಸುತ್ತಾರೆ ಎನ್ನುವುದನ್ನು ಖಚಿತಪಡಿಸಬೇಕು ಎಂದು ಸುಧಾಕರ್ ಆಗ್ರಹಿಸಿದರು.
ಸುದ್ಧಿಗೋಷ್ಠಿಯಲ್ಲಿ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ್, ಮಾಜಿ ಶಾಸಕಿ ಅನಸೂಯಮ್ಮ, ನಗರಸಭೆ ಮಾಜಿ ಅಧ್ಯಕ್ಷ ಡಿ.ಎಸ್.ಆನಂದರೆಡ್ಡಿ ಬಾಬು, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮರಳುಕುಂಟೆ ಕೃಷ್ಣಮೂರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.