Chikkaballapur : ಲೋಕಾಯುಕ್ತ (Lokayukta) ಪೊಲೀಸ್ ಅಧಿಕಾರಿಗಳು ಚಿಕ್ಕಬಳ್ಳಾಪುರ ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಬುಧವಾರ ಚಿಕ್ಕಬಳ್ಳಾಪುರ ತಾಲ್ಲೂಕಿಗೆ ಸಂಬಂಧಿಸಿದಂತೆ ಸಾರ್ವಜನಿಕರ ಕುಂದುಕೊರತೆಗಳು ಮತ್ತು ಅಹವಾಲು ಸಭೆಯನ್ನು (Public Grievance Meeting) ನಡೆಸಿದರು. ಕಂದಾಯ ಇಲಾಖೆಗೆ ಸಂಬಂಧಿಸಿದ 17, ನಗರಸಭೆ, ತಾಲ್ಲೂಕು ಭೂಮಾಪಕ ಇಲಾಖೆಗೆ ಸಂಬಂಧಿಸಿದ ತಲಾ ಒಂದು ಮತ್ತು ತಾಲ್ಲೂಕು ಪಂಚಾಯಿತಿಗೆ ಸಂಬಂಧಿಸಿದ ಎರಡು ಅರ್ಜಿಗಳು ಸಲ್ಲಿಕೆಯಾದವು.
ಈ ಸಂದರ್ಭದಲ್ಲಿ ಮಾತನಾಡಿದ ಲೋಕಾಯುಕ್ತ ಡಿವೈಎಸ್ಪಿ ವೀರೇಂದ್ರ “ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲು ಸರ್ಕಾರ ಸಕಾಲ, ಇ–ಆಡಳಿತ ಸೇರಿದಂತೆ ಹಲವು ಸೇವೆ ಸೌಲಭ್ಯಗಳನ್ನು ಜಾರಿಗೊಳಿಸಿದೆ. ಆದರೆ ಇವುಗಳನ್ನು ಬುದ್ಧಿವಂತರು ಮಾತ್ರ ಬಳಸಿಕೊಳ್ಳುತ್ತಿದ್ದಾರೆ.ವ್ಯವಸ್ಥೆ ಯಲ್ಲಿ ಅಮಾಯಕರು ಮೋಸ ಹೋಗುತ್ತಿದ್ದಾರೆ. ಮಧ್ಯವರ್ತಿ ಹಾವಳಿ ತಪ್ಪಿಸಿ ಅಮಾಯಕರಿಗೆ ಆಗುತ್ತಿರುವ ವಂಚನೆಗಳನ್ನು ತಪ್ಪಿಸಬೇಕು ಎನ್ನುವ ಉದ್ದೇಶದಿಂದ ಸರ್ಕಾರ ವಿವಿಧ ಇಲಾಖೆಗಳಲ್ಲಿ ಆನ್ಲೈನ್ ವ್ಯವಸ್ಥೆ ಜಾರಿಗೊಳಿಸಿದ್ದು ಯಾವುದೇ ಇಲಾಖೆಯ ಸರ್ಕಾರಿ ಅಧಿಕಾರಿ, ಸಿಬ್ಬಂದಿ ನಿಮ್ಮ ಕೆಲಸಗಳನ್ನು ಮಾಡಿ ಕೊಡಲು ವಿಳಂಬ ಮಾಡಿದರೆ, ಹಣಕ್ಕೆ ಬೇಡಿಕೆ ಇಟ್ಟರೆ ನಮಗೆ ದೂರು ಕೊಡಿ. ನಾವು ಕಾನೂನು ರೀತಿಯಲ್ಲಿ ಕ್ರಮಕೈಗೊಳ್ಳುತ್ತೇವೆ. ಸಾರ್ವಜನಿಕರು ಜಾಗೃತರಾಗಬೇಕು. ಭ್ರಷ್ಟಾಚಾರ ತಡೆಗೆ ಸಹಕಾರ ನೀಡಬೇಕು” ಎಂದರು.
ಜಿಲ್ಲಾ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ರಾಮ ಅರಸಿದ್ದಿ, ಇನ್ಸ್ಪೆಕ್ಟರ್ ಶಿವಕುಮಾರ್ ಸೇರಿದಂತೆ ಚಿಕ್ಕಬಳ್ಳಾಪುರ ತಾಲ್ಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.









