Chikkaballapur: ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಗುರುವಾರ ವರದಹಳ್ಳಿ ಗ್ರಾಮ ಮತ್ತು ಬಾಗೇಪಲ್ಲಿ ತಾಲ್ಲೂಕಿನ ಪರಗೋಡು ಗ್ರಾಮಕ್ಕೆ ಭೇಟಿ ನೀಡಿ, ಶಿಕ್ಷಕ ಗಣತಿದಾರರಿಂದ ನಡೆಯುತ್ತಿದ್ದ ಸಮೀಕ್ಷೆ ಕಾರ್ಯವನ್ನು (SC reservation survey) ಪರಿಶೀಲಿಸಿದರು.
ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ “ಗಣತಿದಾರರು ಮನೆಗೆ ಬರುವಾಗ ಸ್ಪಷ್ಟವಾಗಿ ಮಾಹಿತಿ ನೀಡಬೇಕು. ಅವರು ಕೇಳುವ ಪ್ರಶ್ನೆಗಳಿಗೆ ಸಹಕಾರ ನೀಡಿದರೆ ಸಮೀಕ್ಷೆ ಸುಲಭವಾಗುತ್ತದೆ. ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯ ಒಳಮೀಸಲಾತಿಗೆ ಸಂಬಂಧಿಸಿದಂತೆ ಮನೆ ಮನೆಗೆ ತೆರಳಿ ನಡೆಯುತ್ತಿರುವ ಸಮೀಕ್ಷೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಮೇ 8 ರವರೆಗೆ 5,877 ಜನರ ಮಾಹಿತಿ ಸಂಗ್ರಹವಾಗಿದೆ. ಈ ವರದಿಯಿಂದ ಸರಕಾರದ ಯೋಜನೆಗಳು ಅರ್ಹರಿಗೆ ತಲುಪಲು ಸಹಾಯವಾಗುತ್ತದೆ,” ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಅತಿಕ್ ಪಾಷಾ, ಸಮಾಜ ಕಲ್ಯಾಣ ಉಪನಿರ್ದೇಶಕ ತೇಜಾನಂದ್ ರೆಡ್ಡಿ, ಸಹಾಯಕ ನಿರ್ದೇಶಕ ಶೇಷಾದ್ರಿ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು, ಗಣತಿದಾರರು ಭಾಗವಹಿಸಿದ್ದರು.