Sidlaghatta : ಶಿಡ್ಲಘಟ್ಟ ತಾಲ್ಲೂಕು ಕಚೇರಿಯಲ್ಲಿ ಶುಕ್ರವಾರ ತಹಶೀಲ್ದಾರ್ ಬಿ.ಎನ್. ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಹಕ್ಕಿ ಜ್ವರ ತಡೆಗಟ್ಟಲು ಪೂರ್ವಸಿದ್ಧತಾ ಸಭೆ ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಬಿ.ಎನ್. ಸ್ವಾಮಿ ಮಾತನಾಡಿ, “ಹಕ್ಕಿ ಜ್ವರ ಪಕ್ಷಿಗಳಿಗೆ ಹರಡುವ ಖಾಯಿಲೆಯಾಗಿದ್ದು, ಮನುಷ್ಯರಿಂದ ಮನುಷ್ಯರಿಗೆ ಇದು ಸಾಂಕ್ರಮಿಕವಾಗಿ ಹರಡುವುದಿಲ್ಲ. ಆದ್ದರಿಂದ ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ. ಕೋಳಿ ಮಾಂಸ ಹಾಗೂ ಮೊಟ್ಟೆ ಸೇವನೆ ಮೇಲೂ ಯಾವುದೇ ನಿರ್ಬಂಧವಿಲ್ಲ. ನಗರ ಮತ್ತು ಗ್ರಾಮೀಣ ಭಾಗದ ಕೋಳಿ ಸಾಕಾಣಿಕೆ ಕೇಂದ್ರಗಳು, ಕೋಳಿ ಮಾಂಸ ಹಾಗೂ ಮೊಟ್ಟೆ ಮಾರಾಟ ಅಂಗಡಿಗಳಿಗೆ ಹಕ್ಕಿ ಜ್ವರ ಕುರಿತು ಜಾಗೃತಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ” ಎಂದು ತಿಳಿಸಿದರು.
ಕೋಳಿ ಮಾಂಸ ಮತ್ತು ಮೊಟ್ಟೆಗಳನ್ನು 70 ಡಿಗ್ರಿ ಹೆಚ್ಚು ಉಷ್ಣಾಂಶದಲ್ಲಿ ಕನಿಷ್ಠ 30 ನಿಮಿಷ ಬೇಯಿಸಿದರೆ ವೈರಾಣು ನಾಶಗೊಳ್ಳುತ್ತದೆ. ಆದ್ದರಿಂದ ಮಾಂಸ ಮತ್ತು ಮೊಟ್ಟೆಗಳನ್ನು ಸಂಪೂರ್ಣ ಬೇಯಿಸಿದ ನಂತರವೇ ಸೇವಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದರು.
ಜಾಗೃತಿಗೆ ನಿರ್ದೇಶನ:
ಹಕ್ಕಿ ಜ್ವರ ಕುರಿತು ಅರಿವು ಮೂಡಿಸಲು ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಕೋಳಿ ಸಾಕಾಣಿಕೆ ಮಾಲೀಕರು ತಮ್ಮ ಕೋಳಿಗಳಲ್ಲಿ ಅಸಹಜ ಸಾವು ಕಂಡುಬಂದರೆ ತಕ್ಷಣವೇ ಪಶುಪಾಲನಾ ಇಲಾಖೆಗೆ ಮಾಹಿತಿ ನೀಡಬೇಕೆಂದು ಸೂಚಿಸಲಾಗಿದೆ. ಇದಲ್ಲದೇ, ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿರುವ ಕೋಳಿ ಮಾಂಸ ಹಾಗೂ ಮೊಟ್ಟೆ ಅಂಗಡಿಗಳಲ್ಲಿ ಉತ್ಪಾದನೆಯಾಗುವ ತ್ಯಾಜ್ಯಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಇಒ ಹೇಮಾವತಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶಮೂರ್ತಿ, ಆರೋಗ್ಯ ಇಲಾಖೆಯ ದೇವರಾಜ್, ಅಪೇಕ್ಷ ಸೇರಿದಂತೆ ವಿವಿಧ ಅಧಿಕಾರಿಗಳು ಹಾಜರಿದ್ದರು.