Home Sidlaghatta ರಸ್ತೆ, ಆಸ್ಪತ್ರೆ ಮತ್ತು ಶೈಕ್ಷಣಿಕ ಅಭಿವೃದ್ದಿಗೆ ಆದ್ಯತೆ

ರಸ್ತೆ, ಆಸ್ಪತ್ರೆ ಮತ್ತು ಶೈಕ್ಷಣಿಕ ಅಭಿವೃದ್ದಿಗೆ ಆದ್ಯತೆ

0
150

Sidlaghatta : ರಸ್ತೆ, ಆಸ್ಪತ್ರೆ ಮತ್ತು ಶೈಕ್ಷಣಿಕ ವ್ಯವಸ್ಥೆಯನ್ನು ಉತ್ತಮಪಡಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಶಿಡ್ಲಘಟ್ಟ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯನ್ನು 100 ಹಾಸಿಗೆಗಳಿಗೆ ಉನ್ನತೀಕರಣ, ಅತ್ಯಗತ್ಯವಿರುವ ಸರ್ಕಾರಿ ಶಾಲಾ ಕೊಠಡಿಗಳ ನಿರ್ಮಾಣ ಮತ್ತು ಗ್ರಾಮಾಂತರ ರಸ್ತೆ ನಿರ್ಮಾಣಕ್ಕೆ ಅನುದಾನಕ್ಕಾಗಿ ಸಂಬಂಧಪಟ್ಟ ಸಚಿವರುಗಳೊಡನೆ ಚರ್ಚಿಸಿ ಅನುದಾನ ಪಡೆಯಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ತಾಲ್ಲೂಕಿನ ಮೇಲೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ನಡೆಯುತ್ತಿರುವ ಪ್ರಗತಿ ಕಾಮಗಾರಿಯನ್ನು ವೀಕ್ಷಿಸಿ ಅವರು ಮಾತನಾಡಿದರು.

ಶಾಸಕ ಬಿ.ಎನ್.ರವಿಕುಮಾರ್ ಅವರು ಆಸಕ್ತಿ ವಹಿಸಿ ರಸ್ತೆ, ಆಸ್ಪತ್ರೆ ಮತ್ತು ಶೈಕ್ಷಣಿಕ – ಮೂರೂ ಕ್ಷೇತ್ರಗಳಲ್ಲಿ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ.

ಸರ್ಕಾರದ ಅನುದಾನಕ್ಕಾಗಿ ಪ್ರಯತ್ನಿಸುವ ನಿಟ್ಟಿನಲ್ಲಿ ಸೂಕ್ತ ದಾಖಲೆ ಪತ್ರಗಳೊಂದಿಗೆ ಮನವಿಯನ್ನು ನೀಡುವಂತೆ ಹೇಳಿರುವೆ. ಅದನ್ನು ಆಯಾ ಸಚಿವರಿಗೆ ಖುದ್ದಾಗಿ ನೀಡಿ, ಅವಶ್ಯಕ ಅನುದಾನಕ್ಕಾಗಿ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಒಳ ಮೀಸಲಾತಿ ಜಾರಿ :

ಒಳ ಮೀಸಲಾತಿ ಜಾರಿ ವಿಚಾರವಾಗಿ ಗೃಹಸಚಿವರ ಮನೆಯಲ್ಲಿ ಸಭೆ ನಡೆಸಿದ್ದೇವೆ. ಸುಧೀರ್ಘವಾಗಿ ಚರ್ಚಿಸಿದೆವು. ಸುಪ್ರೀಂ ಕೋರ್ಟ್ ತೀರ್ಮಾನವನ್ನು ಜಾರಿಗೊಳಿಸಲು ಎಲ್ಲರೂ ಒಪ್ಪಿದ್ದೇವೆ. ಯಾವ ಸಮುದಾಯಕ್ಕೂ ಅನ್ಯಾಯವಾಗದ ಹಾಗೆ ನೋಡಿಕೊಳ್ಳಲಾಗುವುದು. ವಿನಾಕಾರಣ ಟೀಕೆ ಮಾಡುವುದನ್ನು ಖಂಡಿಸುತ್ತೇನೆ ಎಂದರು.

ಎತ್ತಿನಹೊಳೆಯಿಂದ ಕುಡಿಯಲು ನೀರು :

ಎತ್ತಿನಹೊಳೆ ನೀರು ಬಂದೇ ಬರುತ್ತದೆ. ಇದರ ಬಗ್ಗೆ ಅನುಮಾನಗಳು ಬೇಡ. ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಇನ್ನು ಒಂದೂವರೆ ವರ್ಷದೊಳಗೆ ಕುಡಿಯುವ ನೀರು ಲಭ್ಯವಾಗಲಿದೆ.

ಕೋಲಾರ ನಾಲ್ಕೂವರೆ ಟಿ.ಎಂ.ಸಿ, ಚಿಕ್ಕಬಳ್ಳಾಪುರ ನಾಲ್ಕು ಟಿ.ಎಂ.ಸಿ ಮತ್ತು ಬೆಂಗಳೂರು ಗ್ರಾಮಾಂತರಕ್ಕೆ ನಾಲ್ಕು ಟಿ.ಎಂ.ಸಿ ನೀರು ಸಿಗಲಿದೆ ಎಂದರು.

ಶಾಸಕ ಬಿ.ಎನ್.ರವಿಕುಮಾರ್ ಮಾತನಾಡಿ, ತಾಲ್ಲೂಕಿನಲ್ಲಿ ಗ್ರಾಮೀಣ ಭಾಗದಲ್ಲಿ 217 ಕಿ.ಮೀ. ರಸ್ತೆ ಹದಗೆಟ್ಟಿದೆ. ತುರ್ತಾಗಿ ಅವುಗಳನ್ನು ಸರಿಪಡಿಸಬೇಕಿದೆ.

ನಗರದಲ್ಲಿ ಅಂಬೇಡ್ಕರ್ ಭವನಕ್ಕೆ ಸ್ಥಳ ನಿಗದಿಯಾಗಿದೆ, ಸುಸಜ್ಜಿತ ಕಟ್ಟಡ ನಿರ್ಮಾಣವಾದರೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಅದಕ್ಕಾಗಿ ಸಚಿವರು ಅನುದಾನ ಕೊಡಿಸಬೇಕೆಂದು ಮನವಿ ಮಾಡಿದ್ದೇನೆ.

ನಗರದ ಸಾರ್ವಜನಿಕ ಆಸ್ಪತ್ರೆಯನ್ನು 100 ಹಾಸಿಗೆಗಳಿಗೆ ಉನ್ನತೀಕರಣಕ್ಕಾಗಿ ಸ್ಥಳ ನಿಗದಿಯಾಗಿದೆ, ಅದಕ್ಕೂ ಅನುದಾನ ಬೇಕಿದೆ. ತಾಲ್ಲೂಕಿನಾದ್ಯಂತ ಸುಮಾರು 175 ಶಾಲೆಗಳ ಕೊಠಡಿಗಳು ನಿರ್ಮಿಸಬೇಕಿದೆ.

ಕ್ಷೇತ್ರದ ಈ ಅಭಿವೃದ್ಧಿ ಕೆಲಸಗಳಿಗೆ ಸಚಿವರಿಗೆ ಮನವಿ ಸಲ್ಲಿಸಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮೇಲೂರಿನ ಸರ್ಕಾರಿ ಪ್ರೌಢಶಾಲೆಗೆ ಸಿ.ಎಸ್.ಆರ್ ಅನುದಾನವನ್ನು ಕೊಡಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮುಖಂಡರಾದ ಕಂಬದಹಳ್ಳಿ ಜಗದೀಶ್, ಆರ್.ಎ.ಉಮೇಶ್, ಮುನೀಂದ್ರ, ಶ್ರೀನಿವಾಸ್, ರಾಮಕೃಷ್ಣಪ್ಪ ಹಾಜರಿದ್ದರು.

For Daily Updates WhatsApp ‘HI’ to 7406303366

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!