Home Sidlaghatta ಶಿಡ್ಲಘಟ್ಟದಲ್ಲಿ ಹೈಟೆಕ್ ರೇಷ್ಮೆ ಮಾರ್ಕೆಟ್ ನಿರ್ಮಾಣ

ಶಿಡ್ಲಘಟ್ಟದಲ್ಲಿ ಹೈಟೆಕ್ ರೇಷ್ಮೆ ಮಾರ್ಕೆಟ್ ನಿರ್ಮಾಣ

0
Sidlaghatta hitech Silk Cocoon Market

Sidlaghatta : ಶಿಡ್ಲಘಟ್ಟ ನಗರದ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಗೆ (Government Silk Cocoon Market) ರಾಜ್ಯ ರೇಷ್ಮೆ ಹಾಗೂ ಯುವ ಸಬಲೀಕರಣ ಇಲಾಖೆಯ ಸಚಿವ ನಾರಾಯಣಗೌಡ ಬುಧವಾರ ಭೇಟಿ ನೀಡಿ, ರೇಷ್ಮೆ ಬೆಳೆಗಾರರು ಮತ್ತು ನೂಲು ಬಿಚ್ಚಾಣಿಕೆದಾರರ ಸಮಸ್ಯೆಗಳನ್ನು ಆಲಿಸಿದರು.

 ಮಾರುಕಟ್ಟೆಯಲ್ಲಿ ಸಮರ್ಪಕವಾಗಿ CCTV ಕ್ಯಾಮರಾಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು ಮಾರುಕಟ್ಟೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ರೇಷ್ಮೆ ಗೂಡುಗಳನ್ನು ಪರಿಶೀಲಿಸಿದರು. ನಂತರ ಮಾರುಕಟ್ಟೆಯಲ್ಲಿ ಅನುಷ್ಠಾನಗೊಳಿಸುತ್ತಿರುವ e-Auction ಮತ್ತು e-Payment ವ್ಯವಸ್ಥೆಯನ್ನು ವೀಕ್ಷಣೆ ಮಾಡಿದರು.

 ವ್ಯಾಪಾರ ಮತ್ತು ವಹಿವಾಟಿನಲ್ಲಿ ಅತಿ ದೊಡ್ಡ ರೇಷ್ಮೆ ಗೂಡಿನ ಮಾರುಕಟ್ಟೆಯಿರುವ ರಾಮನಗರದಲ್ಲಿ ಹೈಟೆಕ್ ಮಾರ್ಕೆಟ್ ನಿರ್ಮಿಸಲು ಕ್ರಮ ಕೈಗೊಂಡಿದ್ದು, ಮುಂದಿನ ದಿನಗಳಲ್ಲಿ ಶಿಡ್ಲಘಟ್ಟ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆ ಸಹ ಹೈಟೆಕ್ ಮಾರ್ಕೆಟ್ ಮಾಡಿ ರೇಷ್ಮೆ ಉದ್ದಿಮೆಯಲ್ಲಿ ತೊಡಗಿರುವ ರೇಷ್ಮೆ ಬೆಳೆಗಾರರು ಹಾಗೂ ಬಿಚ್ಚಾಣಿಕೆದಾರರ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲಾಗುವುದೆಂದರು.

 ರಾಜ್ಯ ರೇಷ್ಮೆ ನೂಲು ಬಿಚ್ಚಾಣಿಕೆದಾರರ ಸಂಘದ ಕಾರ್ಯಾಧ್ಯಕ್ಷ ಮೊಹ್ಮದ್ ಅನ್ವರ್ ಮಾತನಾಡಿ, ಶಿಡ್ಲಘಟ್ಟದಲ್ಲಿ 3 ಸಾವಿರ ಮಂದಿ ಸೇರಿದಂತೆ ರಾಜ್ಯದಲ್ಲಿ 7 ಸಾವಿರ ರೇಷ್ಮೆ ಬಿಚ್ಚಾಣಿಕೆದಾರರು ಇದ್ದಾರೆ. ಈ ಉದ್ಯಮದಲ್ಲಿ ಸುಮಾರು 50 ಸಾವಿರ ಕಾರ್ಮಿಕರಿದ್ದಾರೆ. ಶಿಡ್ಲಘಟ್ಟದ ರೇಷ್ಮೆಗೆ ದೇಶದಲ್ಲೇ ಸಾಕಷ್ಟು ಬೇಡಿಕೆಯಿದೆ. ಇನ್ನಷ್ಟು ಹೆಚ್ಚಿನ ತಂತ್ರಜ್ಞಾನವನ್ನು ಅಳವಡಿಸಿದರೆ, ಜಗತ್ತಿನಲ್ಲೇ ಅತ್ಯುತ್ತಮ ಗುಣಮಟ್ಟದ ರೇಷ್ಮೆ ಉತ್ಪಾದಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿ ಜೊತೆಗೆ ರೀಲರ್ಸ್‍ಗಳಿಗೆ ಆರ್ಥಿಕ ಸಹಾಯ ನೀಡಬೇಕು ಎಂದು ಮನವಿ ಸಲ್ಲಿಸಿದರು.

 ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ ಮಾತನಾಡಿ, ರಾಜ್ಯದಲ್ಲಿ ಸುಮಾರು ಒಂದೂಕ್ಕಾಲು ಕೋಟಿ ಜನರು ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ರೇಷ್ಮೆ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಉದ್ಯಮ ನಶಿಸಿಹೋಗುತ್ತಿದ್ದು, ಇದನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಅದಕ್ಕಾಗಿ ಬಜೆಟ್‍ನಲ್ಲಿ ಹೆಚ್ಚಿನ ಅನುದಾನ ಮಿಸಲಿಡಬೇಕು ಎಂದು ಮನವಿ ಸಲ್ಲಿಸಿದರು. ಇದೇ ವೇಳೆ ರೇಷ್ಮೆ ಮಂಡಿ ವಿಚಾರದಲ್ಲಿ ಸಾಕಷ್ಟು ತೊಂದರೆಗಳಿವೆ. ಅದನ್ನು ನಿಲ್ಲಿಸುವಂತಹ ಕೆಲಸ ಸರ್ಕಾರ ಮಾಡಬೇಕು ಎಂದು ರೇಷ್ಮೆ ಬೆಳೆಗಾರರು ಮನವಿ ಮಾಡಿದರು. ಚಿಕ್ಕಬಳ್ಳಾಪುರದಲ್ಲಿ ಸರ್ ಎಂ.ವಿಶ್ವೇಶ್ವರಯ್ಯನವರ ಹೆಸರಿನಲ್ಲಿ ರೈತ ಭವನ ನಿರ್ಮಿಸಬೇಕು ಎಂದು ಮನವಿ ಮಾಡಿದರು.

ಮಾರುಕಟ್ಟೆಗೆ ಭೇಟಿ ನೀಡಿದ ಬಳಿಕ ನಗರದ ನೆಹರು ಕ್ರೀಡಾಂಗಣಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಸಚಿವ ನಾರಾಯಣಗೌಡ ಪರಿಶೀಲಿಸಿದರು. ನಂತರ ರೇಷ್ಮೆ ನೂಲು ಬಿಚ್ಚಾಣಿಕೆ ಘಟಕಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಬಳಿಕ ಶಿಡ್ಲಘಟ್ಟ ನಗರದಲ್ಲಿ ಪ್ರಗತಿಪರ ರೇಷ್ಮೆ ನೂಲು ಬಿಚ್ಚಾಣಿಕೆದಾರರ ಕೈಗಾರಿಕಾ ಸಹಕಾರ ಸಂಘವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಸಕ ವಿ.ಮುನಿಯಪ್ಪ, ಮಾಜಿ ಶಾಸಕ ಎಂ.ರಾಜಣ್ಣ, ರಾಜ್ಯ ರೇಷ್ಮೆ ಅಭಿವೃದ್ಧಿ ಆಯುಕ್ತ ಟಿ. ಪೆದಪ್ಪಯ್ಯ, ರಾಜ್ಯ ರೀಲರ್ಸ್ ಸಂಘದ ಕಾರ್ಯಾಧ್ಯಕ್ಷ ಮೊಹಮ್ಮದ್ ಅನ್ವರ್, ತಾಲ್ಲೂಕು ಅಧ್ಯಕ್ಷ ಅನ್ಸರ್ ಖಾನ್, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸುರೇಂದ್ರ ಗೌಡ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ, ರೇಷ್ಮೆ ಇಲಾಖೆಯ ಜಂಟಿ ನಿರ್ದೇಶಕ ನಾಗಭೂಷಣ್, ಜಿಲ್ಲಾ ಪಂಚಾಯತ್ ಉಪ ನಿರ್ದೇಶಕ ಆಂಜನೇಯ ಗೌಡ ಹಾಜರಿದ್ದರು.

For Daily Updates WhatsApp ‘HI’ to 7406303366

error: Content is protected !!
Exit mobile version