Home Sidlaghatta ಗಣರಾಜ್ಯೋತ್ಸವ ಕಾರ್ಯಕ್ರಮ

ಗಣರಾಜ್ಯೋತ್ಸವ ಕಾರ್ಯಕ್ರಮ

0
206

Sidlaghatta : ಸಂವಿಧಾನದ ಆಶಯದಂತೆ ನಮ್ಮ ಕ್ಷೇತ್ರದ ಜನರಿಗೆ ಶಿಕ್ಷಣ, ಆರೋಗ್ಯ, ಮತ್ತು ನೆಮ್ಮದಿಯ ಬದುಕು ಒದಗಿಸಲು ಪ್ರತಿಯೊಬ್ಬ ಜನಪ್ರತಿನಿಧಿಯು ಶ್ರಮಿಸಿದಾಗ ಮಾತ್ರ ಸಂವಿಧಾನ ರಚಿಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಶಾಸಕ ಬಿ.ಎನ್. ರವಿಕುಮಾರ್ ಹೇಳಿದರು.

ನಗರದ ನೆಹರು ಕ್ರೀಡಾಂಗಣದಲ್ಲಿ ಭಾನುವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಯೋಜಿಸಿದ್ದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರತಿಯೊಬ್ಬ ಪ್ರಜೆಗೂ ಸಮಾನ ಶಿಕ್ಷಣ, ಮೂಲಭೂತ ಹಕ್ಕುಗಳು, ಧಾರ್ಮಿಕ ಹಕ್ಕುಗಳು, ಮತ್ತು ಶಿಕ್ಷಣದ ಹಕ್ಕು ಸಂವಿಧಾನದ ಕೊಡುಗೆ. ಸಮಾಜದ ಕೊನೆಯ ವ್ಯಕ್ತಿಗೂ ಸಮಾನ ಹಕ್ಕು ನೀಡಿದ ಮಹನೀಯ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹೀರೋಗಳಿಗೆ ನಾವು ಸದಾ ಋಣಿಯಾಗಿರಬೇಕು ಎಂದು ಅವರು ಹೇಳಿದರು.

ಭಾರತವು ಅತ್ಯಧಿಕ ಮಾನವ ಸಂಪತ್ತು ಮತ್ತು ಯುವಶಕ್ತಿ ಹೊಂದಿರುವ ರಾಷ್ಟ್ರ. ಈ ದೇಶವನ್ನು ಪ್ರಗತಿಯ ಶೃಂಗಕ್ಕೆ ತಲುಪಿಸುವ ಹೊಣೆಪ್ರತ್ಯೇಕೆ ಪ್ರತಿಯೊಬ್ಬ ಭಾರತೀಯರ ಮೇಲಿದ್ದು, ಗುಣಮಟ್ಟದ ಶಿಕ್ಷಣ ಪ್ರತಿಯೊಂದು ಮಗುವಿಗೂ ಸಿಗಬೇಕು. ಶಿಕ್ಷಕರು ಮಕ್ಕಳಲ್ಲಿ ದೇಶಪ್ರೇಮ ಮತ್ತು ಸಂವಿಧಾನದ ಮಹತ್ವವನ್ನು ಬೋಧಿಸಬೇಕು. ಸಂವಿಧಾನದ ಉದ್ದೇಶಗಳು, ರಚನೆಯ ರೀತಿ, ಮತ್ತು ಅದರ ಅನಿವಾರ್ಯತೆಯನ್ನು ಮಕ್ಕಳಿಗೆ ಮನವರಿಕೆ ಮಾಡಿಕೊಡುವುದು ಮುಖ್ಯ ಎಂದರು.

ತಹಶೀಲ್ದಾರ್ ಬಿ.ಎನ್. ಸ್ವಾಮಿ ಮಾತನಾಡಿ, ಭಾರತೀಯರ ಐಕ್ಯತೆಯ ಸಂಕೇತವಾಗಿ ಗಣರಾಜ್ಯೋತ್ಸವ ದಿನಾಚರಣೆ ನಮಗೆ ಮಹತ್ವದ ದಿನವಾಗಿದೆ. ನಾವು ಭಾರತೀಯರು ಎಂಬ ಭಾವನೆ ಬೆಳೆಸಿಕೊಂಡು ರಾಷ್ಟ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು. ಜಾತ್ಯತೀತ ಮೌಲ್ಯಗಳು ಮತ್ತು ಭ್ರಾತೃತ್ವದ ಪರಿಧಿಯಲ್ಲಿ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ರಾಷ್ಟ್ರಭಾವೈಕ್ಯತೆಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ಶ್ರಮಿಸೋಣ ಎಂದರು.

ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳ ಪಥಸಂಚಲನ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯುವ ಮೂಲಕ ಉತ್ಸವಕ್ಕೆ ಶೋಭೆ ತಂದವು.

ತಾಲ್ಲೂಕು ಪಂಚಾಯಿತಿ ಇಓ ಆರ್. ಹೇಮಾವತಿ, ಪೌರಾಯುಕ್ತ ಮಂಜುನಾಥ್, ನಗರಸಭೆ ಅಧ್ಯಕ್ಷ ಎಂ.ವಿ. ವೆಂಕಟಸ್ವಾಮಿ, ಉಪಾಧ್ಯಕ್ಷೆ ರೂಪ ನವೀನ್, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರಕುಮಾರ್, ಬಂಕ್ ಮುನಿಯಪ್ಪ, ತಾದೂರು ರಘು, ಸರ್ಕಲ್ ಇನ್ಸ್ ಪೆಕ್ಟರ್ ಶ್ರೀನಿವಾಸ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶಮೂರ್ತಿ, ಮತ್ತು ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್. ಸುಬ್ಬಾರೆಡ್ಡಿ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

For Daily Updates WhatsApp ‘HI’ to 7406303366

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!