Home Sidlaghatta ಶ್ರೀ ರೇಣುಕಾ ಯಲ್ಲಮ್ಮದೇವಿಯ ಹೂವಿನ ಕರಗ

ಶ್ರೀ ರೇಣುಕಾ ಯಲ್ಲಮ್ಮದೇವಿಯ ಹೂವಿನ ಕರಗ

0
241

Sidlaghatta: ಶಿಡ್ಲಘಟ್ಟ ನಗರದಲ್ಲಿ ಶ್ರೀ ರೇಣುಕಾ ಯಲ್ಲಮ್ಮದೇವಿಯ ಹೂವಿನ ಕರಗವು ಗುರುವಾರ ರಾತ್ರಿ ವಿಜೃಂಭಣೆಯಿಂದ ನಡೆಯಿತು. ಈ ಬಾರಿ ಪಿ.ಎಂ.ರಮೇಶ್ ಅವರು ಕರಗವನ್ನು ಹೊತ್ತಿದ್ದರು.

ಕರಗ ಮಹೋತ್ಸವದ ಅಂಗವಾಗಿ ಗುರುವಾರ ಮಧ್ಯಾಹ್ನ ದೇವರಿಗೆ ಕಲ್ಯಾಣೋತ್ಸವ, ಸಂಜೆ ದಾಸಯ್ಯನವರ ಮಣಿಸೇವೆ ನಡೆಸಲಾಯಿತು. ಬಾವಿಯ ಬಳಿ ಕರಗ ಹೊರುವವರಿಂದ ಗಂಗೆ ಪೂಜೆ ನಂತರ ಮಧ್ಯರಾತ್ರಿ ಕರಗಕ್ಕೆ ಪೂಜೆ ಸಲ್ಲಿಸಿ ತಲೆಯ ಮೇಲೆ ಹೊರಿಸಲಾಯಿತು.

ಮುಂದೆ ಕತ್ತಿ ಹಿಡಿದ ವೀರಕುಮಾರರು, ಹಿಂದೆ ಕುಣಿಯುತ್ತಾ ಕರಗ ರಾತ್ರಿಯಿಡೀ ಊರೆಲ್ಲಾ ಸಂಚರಿಸಿತು. ಪ್ರತಿಯೊಬ್ಬರೂ ತಮ್ಮ ಮನೆಗಳ ಮುಂದೆ ರಂಗೋಲಿ ಹಾಕಿ ಅಲ್ಲಿಗೆ ಕರಗ ಬರುತ್ತಿದ್ದಂತೆ ಭಕ್ತಿಯಿಂದ ಆರತಿ ಬೆಳಗಿ ಮಲ್ಲಿಗೆ ಹೂಗಳನ್ನು ಸಮರ್ಪಿಸಿದರು.

ದೇವಾಲಯದಲ್ಲಿ ವಿಶೇಷ ಪೂಜೆ, ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಪ್ರಮುಖ ಬೀದಿಗಳಲ್ಲಿ ವಿದ್ಯುತ್ ದೀಪಾಲಂಕಾರ ಹಾಗೂ ನಗರದ ಬಸ್ ನಿಲ್ದಾಣ ಮತ್ತು ಟಿ ಬಿ ರಸ್ತೆಯಲ್ಲಿ ವಾದ್ಯಗೋಷ್ಠಿಯನ್ನೂ ಆಯೋಜಿಸಲಾಗಿತ್ತು.

ಕರಗ ಆಚರಣೆ :

ಹೂವಿನ ಕರಗವು ಶಿರದ ಮೇಲೆ ಕಳಶ ಹೊತ್ತು ಕುಣಿಯುವ ಕಲೆಯಾಗಿದೆ. ಕರಗದಾಚರಣೆ ಎಂದರೆ ಆದಿಶಕ್ತಿಯ ಆಚರಣೆ ಎಂದು ನಂಬಲಾಗಿದ್ದು, ಆಕೆಯನ್ನು ಕರಗದಮ್ಮ ಎಂದೂ ಕರೆಯಲಾಗುತ್ತದೆ. ಇದನ್ನು ಶಕ್ತಿಯ ಆರಾಧನೆ ಎಂದು ಪರಿಗಣಿಸಿರುವುದು ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಮಾತ್ರ.

ಮಣ್ಣಿನ ಮಡಿಕೆಗೆ ಜಲ ತುಂಬಿಸಲಾಗುತ್ತದೆ. ಆಮೇಲೆ ಅದಕ್ಕೆ ಅರಿಶಿನ, ಕುಂಕುಮ ಮಲ್ಲಿಗೆ ಹೂಗಳಿಂದ ಅಲಂಕರಿಸಿ ಅದರ ಮೇಲೆ ಗೋಪುರದಂತೆ ಮಲ್ಲಿಗೆ ಹೂವಿನ ಹಾರಗಳನ್ನು ಇಳಿಬಿಡಲಾಗುತ್ತದೆ.

ಕರಗ ಹೊರುವವರನ್ನು ಬಾವಿಯ ಬಳಿ ಕರೆದೊಯ್ದು ಗಂಗೆ ಪೂಜೆ ಮಾಡಿಸುವರು. ಅವರಿಗೆ ದೇವಾಲಯದಲ್ಲಿ ಕಪ್ಪು ಬಳೆ, ಸೀರೆ, ಒಡವೆ ಇತ್ಯಾದಿಗಳಿಂದ ಸ್ತ್ರೀಯರ ಅಲಂಕಾರ ಮಾಡುವರು. ಕರಗಕ್ಕೆ ಪೂಜೆ ಸಲ್ಲಿಸಿ ತಲೆಯ ಮೇಲೆ ಹೊರಿಸುತ್ತಾರೆ. ಆಗ ವೀರಕುಮಾರರು ಅಲಗು ಸೇವೆ ಮಾಡುವುದರೊಂದಿಗೆ ಹಲಗೆ, ತಮಟೆ ವಾದ್ಯಗಳ ಸಮೇತ ಕರಗ ದೇವಾಲಯದ ಪ್ರದಕ್ಷಿಣೆ ಮಾಡಿ ನರ್ತಿಸುತ್ತದೆ. ಮುಂದೆ ಕತ್ತಿ ಹಿಡಿದ ವೀರಕುಮಾರರು, ಹಿಂದೆ ಕುಣಿಯುತ್ತಾ ಕರಗ ರಾತ್ರಿಯಿಡೀ ಊರೆಲ್ಲಾ ಸಂಚರಿಸುತ್ತದೆ.

ಮಾಲೂರಿನ ವೇಣುಗೋಪಾಲ ವಹ್ನಿ ಅವರು ಕರಗ ಮತ್ತು ಅದನ್ನು ಆಚರಿಸುವ ಸಮುದಾಯದ ಕುರಿತಂತೆ “ಪಳಯನ್ನರು ಮತ್ತು ದ್ರೌಪದಿ” ಎಂಬ ಸಂಶೋಧನಾ ಕೃತಿಯನ್ನು ರಚಿಸಿದ್ದಾರೆ. ಧಾರ್ಮಿಕ ನಂಬಿಕೆಗಳು, ಸಾಂಸ್ಕೃತಿಕ ಆಚರಣೆಗಳು ಸಂಶೋಧನಾತ್ಮಕವಾಗಿ ಈ ಕೃತಿಯಲ್ಲಿ ಮೂಡಿಬಂದಿದೆ.

For Daily Updates WhatsApp ‘HI’ to 7406303366

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!