Home Sidlaghatta ಅನಧಿಕೃತ ಪ್ಯೂಪಾ ಘಟಕಕ್ಕೆ ಬೀಗ ಜಡಿದ ಅಧಿಕಾರಿಗಳು

ಅನಧಿಕೃತ ಪ್ಯೂಪಾ ಘಟಕಕ್ಕೆ ಬೀಗ ಜಡಿದ ಅಧಿಕಾರಿಗಳು

0

Sidlaghatta : ಶಿಡ್ಲಘಟ್ಟ ನಗರದ ಹೊರವಲಯದ ನಲ್ಲಿಮರದಹಳ್ಳಿಯಲ್ಲಿ ಅಂಜದ್ ಎಂಬುವವರ ಮಾಲೀಕತ್ವದ ಜಮೀನಿನಲ್ಲಿ ನಡೆಸುತ್ತಿದ್ದ ಪ್ಯೂಪಾ ಕೇಂದ್ರವನ್ನು (Silk Pupa Centre) ನಗರಸಭೆ ಅಧಿಕಾರಿಗಳು ಮುಚ್ಚಿಸಿದ್ದಾರೆ. ಅದಕ್ಕೆ ನೀಡಿದ್ದ BESCOM ಸಂಪರ್ಕವನ್ನು ಕೂಡ ಕಡಿತಗೊಳಿಸಲಾಗಿದೆ.

ಈ ಬಗ್ಗೆ ಮಾತನಾಡಿದ ನಗರಸಭೆ ಪೌರಾಯುಕ್ತ ಶ್ರೀಕಾಂತ್, “ಸತ್ತ ರೇಷ್ಮೆ ಹುಳುಗಳನ್ನು ಸಂಸ್ಕರಿಸುವ ಪ್ಯೂಪಾ ಘಟಕದಿಂದ ಕೆಟ್ಟ ವಾಸಸೆ ಬರುತ್ತದೆ. ಈ ದುರ್ವಾಸನೆಯ ಬಗ್ಗೆ ಸುತ್ತಮುತ್ತಲಿನ ಜನರಿಂದ ದೂರು ಬಂದ ಹಿನ್ನೆಲೆಯಲ್ಲಿ ನಾನೇ ಖುದ್ದಾಗಿ ಹಲವು ಬಾರಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರಿಂದ ಅವರಿಗೆ ಎಚ್ಚರಿಕೆ ನೀಡಿದ್ದೆ. ಆದರೂ ಅವರು ಅದನ್ನು ಸರಿಪಡಿಸಿಕೊಳ್ಳಲಿಲ್ಲ. ನ್ಯಾಯಾಧೀಶರು, ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು, ವಕೀಲರ ಸಂಘದವರು, ತಹಶೀಲ್ದಾರರು, ಪರಿಸರ ಇಲಖೆಯವರು ಸಹ ಎಚ್ಚರಿಕೆ ನೀಡಿದ್ದರು. ಆದರೂ ಅವರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ, ಅನಧಿಕೃತವಾಗಿ ಪ್ಯೂಪಾ ಕೇಂದ್ರವನ್ನು ನಡೆಸುತ್ತಿದ್ದರು. ಅದಕ್ಕೆ ಸ್ಥಳಕ್ಕೆ ಭೇಟಿ ನೀಡಿ ಅದನ್ನು ಮುಚ್ಚಿಸಿದ್ದೇವೆ. ಬೆಸ್ಕಾಂ ಸಂಪರ್ಕ ಕೂಡ ಕಡಿತ ಮಾಡಲಾಗಿದೆ. ಈ ರೀತಿಯ ಅನಧಿಕೃತ ಪ್ಯೂಪಾ ಕೇಂದ್ರಗಳು ಎಲ್ಲಿದ್ದರೂ ಅದನ್ನು ಮುಚ್ಚಿಸಲಾಗುತ್ತದೆ” ಎಂದು ಹೇಳಿದರು.

ರೇಷ್ಮೆ ಗೂಡು ಮಾರುಕಟ್ಟೆಯಿಂದ ಗೂಡನ್ನು ಖರೀದಿ ಮಾಡಿದ ಮೇಲೆ ಗೂಡಿ­ನಿಂದ ಕಚ್ಚಾ ರೇಷ್ಮೆ ತೆಗೆದ ನಂತರ ಉಳಿಯುವ ಸತ್ತ ಹುಳುಗಳು (ಪ್ಯೂಪಾ) ಮತ್ತು ತೆಳು ಪರದೆ­ಯಂತಹ ರೇಷ್ಮೆಯನ್ನು ಈ ಪ್ಯೂಪಾ ಘಟಕ­ದವರು ಕೊಂಡು ತರುತ್ತಾರೆ. ಕೆಟ್ಟ ವಾಸನೆ ಬೀರುವ ಈ ಕೆಲಸದಿಂದ ರೇಷ್ಮೆ ಹಾಗೂ ಹುಳು­ಗಳನ್ನು ಬೇರ್ಪಡಿಸಿ ಒಣಗಿಸಿ ಮಾರುತ್ತಾರೆ.

ಪ್ಯೂಪಾ ಘಟಕದಿಂದ ಹೊರ ಸೂಸುವ ದುರ್ನಾತ, ಹಾಗೂ ಕೆಟ್ಟ ಪರಿಸರದಿಂದ ಸೊಳ್ಳೆಗಳ ಉತ್ಪತ್ತಿಯೂ ಹೆಚ್ಚಾಗಿದೆ. ಡೆಂಗಿ, ಚಿಕೂನ್‌ ಗುನ್ಯಾ ಖಾಯಿಲೆಗಳು ಈ ಭಾಗದಲ್ಲಿ ಹೆಚ್ಚಾಗಿವೆ. ಈ ಭಾಗದ ಜನರಿಗೆ ಶ್ವಾಸ ಕೋಶ, ಉಸಿರಾಟ ಸಂಬಂಧಿತ ರೋಗಗಳು ಹೆಚ್ಚುತ್ತಿವೆ. ರೇಷ್ಮೆನೂಲು ತೆಗೆಯುವ ಕೂಲಿ ಕೆಲಸ ಮಾಡುವ ಇಲ್ಲಿನ ಜನರು ರೋಗ ರುಜುನಗಳಿಗೆ ತುತ್ತಾಗಿ ಸಾವಿರಾರು ರೂಪಾಯಿ ಆಸ್ಪತ್ರೆಗೆ ಖರ್ಚು ಮಾಡುವಂತಾಗಿದೆ. ಹಾಗಾಗಿ ಕೂಡಲೇ ಈ ಹುಳು ಸಂಸ್ಕರಣಾ ಘಟಕಗಳನ್ನು ವಸತಿ ಪ್ರದೇಶದಿಂದ ಹೊರಗೆ ಸ್ಥಳಾಂತರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

“ಸತ್ತ ರೇಷ್ಮೆ ಹುಳು ಸಂಸ್ಕರಣಾ ಘಟಕಗಳು. ಇದರಿಂದ ಹೊರ ಸೂಸುವ ದುರ್ನಾತ, ಕ್ರಿಮಿ ಕೀಟಗಳ ಕಾಟದಿಂದ ಸುತ್ತ ಮುತ್ತಲಿನ ಜನರು ಶ್ವಾಸ ಕೋಶ, ಉಸಿರಾಟ ಸಂಬಂಧಿತ ರೋಗಗಳಿಗೆ ತುತ್ತಾಗಿದ್ದಾರೆ.

“ಪುರಸಭೆಯಿಂದ ನಗರಸಭೆಯಾದ ನಂತರ ನಗರದ ವ್ಯಾಪ್ತಿ ಹೆಚ್ಚಾಯಿತು. ನಗರ ಬೆಳೆದು ಹೊರವಲಯದ ಕೆಲ ಗ್ರಾಮಗಳು ಸೇರಿಕೊಂಡಿರುವುದರಿಂದ ಅವುಗಳೂ ನಗರಸಭೆಗೆ ಸೇರಿವೆ. ಹೀಗಾಗಿ ನಗರದ ವ್ಯಾಪ್ತಿಯಲ್ಲಿ ಪರಿಸರ ಇಲಾಖೆಯ ಅನುಮತಿಯನ್ನು ಪಡೆಯದೇ ಅನಧಿಕೃತವಾಗಿ ನಡೆಸುತ್ತಿರುವ ಅಕ್ರಮ ಪ್ಯೂಪಾ ಸಂಸ್ಕರಣ ಘಟಕಗಳಿಂದ ಈ ಭಾಗದ ಜನ ಸಾಮಾನ್ಯರ ಆರೋಗ್ಯ ಹದಗೆಡುತ್ತಿದೆ.

ಇವನ್ನು ಬೇರೆಡೆಗೆ ಸ್ಥಳಾಂತರಿಸಿ ಎಂದು ಎರಡು ವರ್ಷಗಳ ಹಿಂದೆಯೇ ನಾವು ಜಿಲ್ಲಾಧಿಕಾರಿಗೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ, ರೇಷ್ಮೆ ಉಪನಿರ್ದೇಶಕರು ಮಾಲಿನ್ಯ ನಿಯಂತ್ರಣ ಮತ್ತು ಪರಿಸರ ಇಲಾಖೆ, ತಹಶೀಲ್ದಾರ್‌, ರೇಷ್ಮೆ ಸಹಾಯಕ ನಿರ್ದೇಶಕರು ಹಾಗೂ ಪೌರಾಯುಕ್ತರಿಗೆ ಮನವಿ ಸಲ್ಲಿಸಿದ್ದೆವು. ಆದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ” ಎಂದು ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಜೆ.ಎಸ್‌.ವೆಂಕಟಸ್ವಾಮಿ ತಿಳಿಸಿದರು.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook
http://www.facebook.com/sidlaghatta

Instagram
http://www.instagram.com/sidlaghatta

Youtube
https://www.youtube.com/c/sidlaghatta

Website
http://www.sidlaghatta.com

Join Telegram
https://t.me/Sidlaghatta

error: Content is protected !!
Exit mobile version