Home News ಬಡ್ಡಿ ಮಾಫಿಯಾದಿಂದ ದೂರವುಳಿದು ಮಹಿಳೆಯರು ಸ್ವಾವಲಂಬಿಗಳಾಗಬೇಕು

ಬಡ್ಡಿ ಮಾಫಿಯಾದಿಂದ ದೂರವುಳಿದು ಮಹಿಳೆಯರು ಸ್ವಾವಲಂಬಿಗಳಾಗಬೇಕು

0
Sidlaghatta DCC Bank Women Association Loan Event

Sidlaghatta : ಖಾಸಗಿ ವ್ಯಕ್ತಿಗಳ ಬಡ್ಡಿ ಮಾಫಿಯಾದಿಂದ ದೂರವುಳಿಯಬೇಕು, ಮಹಿಳೆಯರು ಸ್ವಾವಲಂಬಿಗಳಾಗಬೇಕು, ಆತ್ಮಾಭಿಮಾನದಿಂದ ಆರ್ಥಿಕ ಪ್ರಗತಿ ಕಾಣಬೇಕು ಎನ್ನುವ ಉದ್ದೇಶದಿಂದ ಡಿಸಿಸಿ ಬ್ಯಾಂಕ್ ವತಿಯಿಂದ ಮಹಿಳಾ ಸ್ವಸಹಾಯ ಸಂಘಗಳಿಗೆ ಬಡ್ಡಿರಹಿತ ಸಾಲ ವಿತರಿಸಲಾಗುತ್ತಿದೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.

ಶಿಡ್ಲಘಟ್ಟ ನಗರದ ಡಾಲ್ಫಿನ್ ವಿದ್ಯಾ ಸಂಸ್ಥೆಯ ಆವರಣದಲ್ಲಿ ಭಾನುವಾರ ಡಿಸಿಸಿ ಬ್ಯಾಂಕ್ ಮತ್ತು ಶಿಡ್ಲಘಟ್ಟ ಟೌನ್ ರೇಷ್ಮೆ ಬೆಳೆಗಾರರ ಹಾಗೂ ರೈತರ ವ್ಯವಸಾಯ ಸೇವಾ ಸಹಕಾರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೆಲವಾರು ವರ್ಷಗಳ ಹಿಂದೆ ಜಿಲ್ಲೆ ಸೇರಿದಂತೆ ತಾಲ್ಲೂಕಿನಾದ್ಯಂತ ಬಹುತೇಕ ಸಹಕಾರ ಸಂಘಗಳು ಕೇವಲ ಪಡಿತರ ವಿತರಣೆ ಮಾಡಲಷ್ಟೇ ಬಳಕೆಯಾಗುತ್ತಿದ್ದವು. ಯಾವುದೇ ಸಾಲ ನೀಡಲು ಅವುಗಳಿಗೆ ಶಕ್ತಿಯಿರಲಿಲ್ಲ. ಇದೀಗ ನಗರದ ಎಸ್.ಎಫ್.ಸಿ.ಎಸ್ ಸೊಸೈಟಿ 20 ಕೋಟಿ ರೂ ಸಾಲ ನೀಡಿದೆ. ಅದು 200 ಕೋಟಿ ರೂಗೆ ಏರಬೇಕು. ಡಿಸಿಸಿ ಬ್ಯಾಂಕ್ ಆರ್ಥಿಕವಾಗಿ ಸಬಲವಾಗಿದ್ದು ಮಹಿಳೆಯರಿಗೆ ಬಡ್ಡಿರಹಿತ ಸಾಲ ನೀಡುವ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ತಾಲ್ಲೂಕಿನಾಧ್ಯಂತ ಇರುವ ಎಲ್ಲಾ ವರ್ಗಗಳ ಮಹಿಳೆಯರಿಗೂ ತಲಾ 1 ಲಕ್ಷ ರೂ ಸಾಲನೀಡುವ ಭರವಸೆ ನೀಡಿದ ಅವರು ಮಹಿಳೆಯರು ಆರ್ಥಿಕವಾಗಿ ಸಬಲರಾದರೆ ಪ್ರತಿಯೊಂದು ಕುಟುಂಬವೂ ಚೆನ್ನಾಗಿರುತ್ತದೆ ಎಂದರು.

ಪಡೆದ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವಲ್ಲಿ ಮಹಿಳೆಯರು ಪ್ರಾಮಾಣಿಕರಾಗಿದ್ದು, ಅವರಿಗೆ ಸಾಲವಷ್ಟೇ ನೀಡುವುದಲ್ಲದೇ ಬ್ಯಾಂಕಿನಿಂದ ಸಿಗಬೇಕಾದ ಎಲ್ಲಾ ಸವಲತ್ತುಗಳನ್ನು ಒದಗಿಸಲು ಡಿಸಿಸಿ ಬ್ಯಾಂಕ್ ಸದಾ ಸಿದ್ದವಾಗಿರುತ್ತದೆ ಎಂದರು.

ಶಾಸಕ ವಿ.ಮುನಿಯಪ್ಪ ಮಾತನಾಡಿ, ಆರ್ಥಿಕ ಸಂಕಷ್ಟದ ನಡುವೆ ಡಿಸಿಸಿ ಬ್ಯಾಂಕಿನಿಂದ ಮಹಿಳಾ ಸ್ವ ಸಹಾಯ ಸಂಘಗಳಿಗೆ ವಿತರಣೆ ಮಾಡುತ್ತಿದೆ. ಬಡ್ಡಿರಹಿತ ಸಾಲ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ನಿಗದಿತ ಸಮಯದಲ್ಲಿ ಮರುಪಾವತಿ ಮಾಡುವ ಮೂಲಕ ಸಹಕಾರಿ ಕ್ಷೇತ್ರದ ಬಲವರ್ಧನೆಗೆ ಸಹಕರಿಸಬೇಕು ಎಂದರು.

ಟೌನ್ ರೇಷ್ಮೆ ಬೆಳೆಗಾರರ ಹಾಗೂ ರೈತರ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಬಿ.ನಾರಾಯಣಸ್ವಾಮಿ ಮಾತನಾಡಿ, ಮುಚ್ಚುವ ಹಂತದಲ್ಲಿದ್ದ ಶಿಡ್ಲಘಟ್ಟ ಟೌನ್ ರೇಷ್ಮೆ ಬೆಳೆಗಾರರ ಹಾಗೂ ರೈತರ ವ್ಯವಸಾಯ ಸೇವಾ ಸಹಕಾರ ಸಂಘದ ಕಳೆದ ಐದು ವರ್ಷದ ಆಡಳಿತದ ಅವಧಿಯಲ್ಲಿ ಆಡಳಿತ ಮಂಡಳಿಯ ಸಹಕಾರದಿಂದ ಈವರೆಗೂ ಮಹಿಳಾ ಸ್ವಸಹಾಯ ಸಂಘಗಳಿಗೆ ಸುಮಾರು 20 ಕೋಟಿ ಬಡ್ಡಿರಹಿತ ಸಾಲ ನೀಡಲಾಗಿದೆ. ಬಡ್ಡಿರಹಿತ ಸಾಲವನ್ನು ಮಹಿಳೆಯರು ನಿಗಧಿತ ಉದ್ದೇಶಕ್ಕೆ ಬಳಸಿಕೊಳ್ಳುವ ಮೂಲಕ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದರು.

 ಈ ಸಂದರ್ಭದಲ್ಲಿ ಶಿಡ್ಲಘಟ್ಟ ಟೌನ್ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಸುಮಾರು 45 ಮಹಿಳಾ ಸ್ವಸಹಾಯ ಸಂಘಗಳಿಗೆ 2 ಕೋಟಿ 8 ಲಕ್ಷ ಬಡ್ಡಿರಹಿತ ಸಾಲ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ಗುಡಿಯಪ್ಪ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮುನಿಕೃಷ್ಣಪ್ಪ, ಟೌನ್ ರೇಷ್ಮೆ ಬೆಳೆಗಾರರ ಹಾಗೂ ರೈತರ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಬಿ.ನಾರಾಯಣಸ್ವಾಮಿ, ಮಾಜಿ ಅಧ್ಯಕ್ಷ ಶೆಟ್ಟಹಳ್ಳಿ ರಾಮಚಂದ್ರಪ್ಪ, ನಿರ್ದೇಶಕರಾದ ವೇಣುಗೋಪಾಲ್, ನರಸಿಂಹಮೂರ್ತಿ, ಕಾಂತರಾಜು, ವೆಂಕಟೇಶಪ್ಪ, ಲಕ್ಷ್ಮಿನಾರಾಯಣ, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಆನಂದ್, ಮೇಲ್ವಿಚಾರಕ ಶ್ರೀನಾಥ್, ಟೌನ್ ಎಸ್‌ಎಫ್‌ಸಿಎಸ್ ಕಾರ್ಯನಿರ್ವಹಣಾಧಿಕಾರಿ ದೇವಿಕ, ಹಾಜರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version