Gauribidanur : ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್, ಜಿಲ್ಲಾಧಿಕಾರಿ ಆರ್.ಲತಾ, ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಜಿ.ಪಂ ಸಿಇಒ ಪಿ.ಶಿವಶಂಕರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಶನಿವಾರ ರಾತ್ರಿ ತಾಲ್ಲೂಕಿನ ಮಂಚೇನಹಳ್ಳಿ ಹೋಬಳಿಯ ಪುರ ಗ್ರಾಮದಲ್ಲಿ ವಾಸ್ತವ್ಯ ಹೂಡಿ ಸ್ಥಳೀಯರಿಂದ ಅಹವಾಲು ಸ್ವೀಕರಿಸಿದರು.
ಶನಿವಾರ ಪುರ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿದ ನಂತರ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಚಿವರು ಹಾಗೂ ಅಧಿಕಾರಿಗಳು ವೀಕ್ಷಿಸಿದರು.
ಸಚಿವ ಡಾ.ಕೆ.ಸುಧಾಕರ್ ಮಾತನಾಡಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮಗಳು ಯಶಸ್ವಿಯಾಗಿದೆ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗ್ರಾಮೀಣ ಪ್ರದೇಶಗಳಲ್ಲಿ ವಾಸ್ತವ್ಯ ಹೂಡುವುದರಿಂದ ಸ್ಥಳೀಯ ಸಮಸ್ಯೆಗಳ ಬಗ್ಗೆ ಅರಿತು ಅವುಗಳಿಗೆ ಪರಿಹಾರ ಕಲ್ಪಿಸಲು ಸಾಧ್ಯವಾಗುವುದರ ಜತೆಗೆ ಅವಶ್ಯಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಹಕಾರಿಯಾಗುತ್ತದೆ. ಜನರಿಂದ ಪಡೆದಿರುವ ಅಹವಾಲುಗಳಿಗೆ ಮುಂದಿನ 15 ದಿನಗಳ ಒಳಗಾಗಿ ಪರಿಹಾರ ಕಲ್ಪಿಸಲಾಗುವುದು ಎಂದು ಹೇಳಿದರು.
ಪುರ ಗ್ರಾಮದಲ್ಲಿನ ಅರಳಿಕಟ್ಟೆ ಬಳಿ ಕುಳಿತು ಸ್ಥಳೀಯರ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಸಚಿವರು ಗ್ರಾ.ಪಂ ಅಧ್ಯಕ್ಷರ ಮನೆಯಲ್ಲಿ, ಜಿಲ್ಲಾಧಿಕಾರಿ ಗ್ರಾ.ಪಂ ಕಾರ್ಯಾಲಯದಲ್ಲಿ ಹಾಗೂ ಎಸ್ಪಿ, ಎಸಿ, ಸಿಇಒ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಿದರು.
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur